ಕುತೂಹಲ ಕೆರಳಿಸಿದ ಪ್ರಧಾನಿ ಕರೆದ ದಿಢೀರ್‌ ಸಭೆ

ನವದೆಹಲಿ, ಡಿ. 05: ಹೊಸ ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆಯುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ದಿಢೀರ್ ಸಭೆಯನ್ನು ಕರೆದಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಇದೇ ವೇಳೆ ದೆಹಲಿಯಲ್ಲಿ ರೈತರ ಪ್ರತಿಭಟನೆ ಮುಂದುವರೆದಿರುವಂತೆಯೇ ಕೇಂದ್ರ ಸರ್ಕಾರ ಮತ್ತು ರೈತರ ನಡುವಿನ ಮಾತುಕತೆ ಅಥವಾ ಸಂಧಾನ ಸಭೆ ಕೂಡ ಮುಂದುವರೆದಿದೆ. ಇದರ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾರೊಂದಿಗೆ ಚರ್ಚೆ ನಡೆಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ರೈತರ ಪ್ರತಿಭಟನೆಯಿಂದಾಗಿ ಕೇಂದ್ರ ಸರ್ಕಾರ ಕೃಷಿ ಕಾನೂನನ್ನು ಹಿಂದಕ್ಕೆ ಪಡೆಯಲು ಅಥವಾ ತಿದ್ದುಪಡಿಗೆ ಮುಂದಾಗಿದೆಯೇ ಎಂಬ ಅನುಮಾನ ಕಾಡತೊಡಗಿದೆ. ಇದೇ ಕಾರಣಕ್ಕೆ ಕೇಂದ್ರ ಸರ್ಕಾರ ವಿಶೇಷ ಸಂಸತ್ ಅಧಿವೇಶನ ನಡೆಸುವ ಸಂಬಂಥ ಸ್ಪೀಕರ್ ಓಂ ಬಿರ್ಲಾರೊಂದಿಗೆ ಚರ್ಚೆ ನಡೆಸುತ್ತಿದೆಯೇ ಎಂಬ ಅನುಮಾನ ಹುಟ್ಟುಕೊಂಡಿದೆ. ಅಲ್ಲದೆ ಈ ಸಭೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪಾಲ್ಗೊಂಡಿರುವುದು ಮತ್ತಷ್ಟು ಕುತೂಹಲ ಕೆರಳಿಸಿದೆ.

Exit mobile version