ಅಹಮದಾಬಾದ್, ಮೇ. 20: ತೌಖ್ತೆ ಚಂಡಮಾರುತದ ಅಬ್ಬರಕ್ಕೆ ಸಿಲುಕಿ ಬಲಿಯಾದವರ ಕುಟುಂಬಕ್ಕೆ ತಲಾ ₹4 ಲಕ್ಷ ಪರಿಹಾರ ನೀಡುವುದಾಗಿ ಗುಜರಾತ್ ಸರ್ಕಾರ ಹೇಳಿದೆ. ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಈ ಬಗ್ಗೆ ಪ್ರಕಟಣೆ ನೀಡಿದ್ದು, ಚಂಡಮಾರುತದಿಂದ ಗಾಯಗೊಂಡವರಿಗೆ ತಲಾ ₹50,000 ನೀಡುವುದಾಗಿ ಹೇಳಿದ್ದಾರೆ.
ಈಗಾಗಲೇ ಕೇಂದ್ರ ಸರ್ಕಾರ ತೌಖ್ತೆ ಚಂಡಮಾರುತದಿಂದಸಾವನ್ನಪ್ಪಿದವರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ್ದು, ಗಾಯಗೊಂಡವರಿಗೆ ₹50,000 ದೊರೆಯಲಿದೆ.
ಗುಜರಾತ್ ಸರ್ಕಾರದ ವರದಿ ಪ್ರಕಾರ 45 ಜನರು ಜೀವ ಕಳೆದುಕೊಂಡಿದ್ದಾರೆ. ಅಲ್ಲದೆ, 16,000ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ. ಜತೆಗೆ 40,000ಕ್ಕೂ ಅಧಿಕ ಮರಗಳು ಧರೆಗುರುಳಿದ್ದು, 70,000ಕ್ಕೂ ಅಧಿಕ ವಿದ್ಯುತ್ ಕಂಬಗಳು ಮುರಿದುಬಿದ್ದಿವೆ. 5,951 ಹಳ್ಳಿಗಳಲ್ಲಿ ಇನ್ನೂ ವಿದ್ಯುತ್ ಸಂಪರ್ಕ ವ್ಯವಸ್ಥೆ ಸರಿಯಾಗಿಲ್ಲ ಎಂದು ಸರ್ಕಾರ ತಿಳಿಸಿದೆ.