ಬೆಂಗಳೂರು, ಜು. 22: ನಾಯಕತ್ವ ಬದಲಾವಣೆಗೆ ವಿಚಾರವಾಗಿ ಕಳೆದೆರಡು ದಿನಗಳಿಂದ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ಸಿಎಂ ಯಡಿಯೂರಪ್ಪ ಕಡೆಗೂ ಮೌನ ಮುರಿದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಬಿ.ಎಸ್.ಯಡಿಯೂರಪ್ಪ, ರಾಜಕೀಯ ಬೆಳವಣಿಗೆಗಳನ್ನ ಆಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ಹಾಗೂ ಅಭಿಮಾನದ ಶಿಸ್ತಿನ ವ್ಯಾಪ್ತಿ ಮೀರಬಾರದು ಎನ್ನುವ ಮೂಲಕ ಅಭಿಮಾನಿಗಳಿಗೆ ಹಾಗೂ ಬೆಂಬಲಿಗರಿಗೆ ಸಂದೇಶ ನೀಡಿದ್ದಾರೆ.
ಅಲ್ಲದೇ, ಪಕ್ಷ ನನಗೆ ಮಾತೃ ಸಮಾನ,ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ ಎಂದಿರುವ ಯಡಿಯೂರಪ್ಪ ಆ ಮೂಲಕ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ.