ಬೆಂಗಳೂರು, ಏ. 29: ಅರಣ್ಯ ಇಲಾಖೆ ಸೆರೆಹಿಡಿದಿದ್ದ ದುಬಾರೆ ಅರಣ್ಯ ಪ್ರದೇಶದ ಆನೆ ಕುಶನನ್ನು ಮರಳಿ ಕಾಡಿಗೆ ಬಿಡಲು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಆದೇಶಿಸಿದ್ದಾರೆ.
ಈ ಸಂಬಂಧ ಅರಣ್ಯ ಇಲಾಖೆ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕಳೆದ ಒಂದು ವರ್ಷದಿಂದ ದುಬಾರೆ ಶಿಬಿರದಿಂದ ತಪ್ಪಿಸಿಕೊಂಡ ಆನೆ ಕುಶ ನನ್ನು ಸೆರೆ ಹಿಡಿದು ತರಲಾಗಿತ್ತು, ಆದರೆ ಕುಶ ಆನೆಯನ್ನು ಸೆರೆ ಹಿಡಿದು ಇಲಾಖೆ ಯಿಂದ ಹಿಂಸೆ ನೀಡಲಾಗುತ್ತಿದೆ ಎಂದು ಪ್ರಾಣಿಪ್ರಿಯರು ಆಕ್ಷೇಪ ವ್ಯಕ್ತಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ಸಭೆ ನಡೆಸಿ ಮಾಹಿತಿ ಪಡೆದ ಸಚಿವ ಅರವಿಂದ ಲಿಂಬಾವಳಿ, ಅಧಿಕಾರಿಗಳು ಕುಶ ಆನೆಗೆ ಯಾವುದೇ ತರಹದ ಹಿಂಸೆ ನೀಡಿಲ್ಲ. ಕುಶ ಆನೆ ಆರೋಗ್ಯವಾಗಿದೆ ಎಂದು ಮಾಹಿತಿ ನೀಡಿದರು. ಈ ಹಿನ್ನೆಲೆಯಲ್ಲಿ ಕುಶ ಆನೆಗೆ ರೋಡಿಯೋ ಕಾಲರ್ ಅಳವಡಿಸಿ, ಸೂಕ್ತ ಸ್ಥಳ ನಿಗದಿ ಪಡಿಸಿದ ಮೇಲೆ, ಎಲ್ಲಾ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಬಿಡುಗಡೆ ಮಾಡಲು ಸಚಿವರು ಆದೇಶಿಸಿದರು.
ಇದೇ ಸಂದರ್ಭದಲ್ಲಿ ದುಬಾರೆ ಸಮೀಪ ಪ್ರಜ್ಞಾ ಚೌಟ ಎನ್ನುವವರು ಆನೆಗಳನ್ನು ತಮ್ಮ ಸುಪರ್ದಿಯಲ್ಲಿ ಇಟ್ಟುಕೊಂಡು ಪೋಷಿಸುತ್ತಿರುವ ಬಗ್ಗೆ ಸ್ಥಳೀಯರಿಂದ ವ್ಯಕ್ತವಾಗಿರುವ ಆಕ್ಷೇಪಣೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಅವರ ಸುಪರ್ದಿಯಲ್ಲಿರುವ ಆನೆಗಳನ್ನು ಇಲಾಖೆಯ ವಶಕ್ಕೆ ಪಡೆಯುವ ಬಗ್ಗೆ ಸಚಿವರು ಅಧಿಕಾರಿಗಳೊಂದಿಗೆ ಚರ್ಚಿಸಿದರು.