ಮುಂಬೈ, ಏ. 05: ಮಹಾರಾಷ್ಟ್ರದಲ್ಲಿ ಕೊವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೇ ಇರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳನ್ನು ವಿಧಿಸಲಾಗಿದೆ. ಈ ಮಧ್ಯೆ ಕ್ಡೌನ್ ಘೋಷಣೆಯಾದರೆ ರೈಲು ಸಂಚಾರ ಸ್ಥಗಿತಗೊಳ್ಳಲಿದೆ ಎಂಬ ಭಯದಿಂದಲೇ ಇಲ್ಲಿನ ಹಲವಾರು ವಲಸೆ ಕಾರ್ಮಿಕರು ತಮ್ಮ ಊರಿಗೆ ಹೊರಟಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ದೂರದೂರಿಗೆ ಪ್ರಯಾಣ ಮಾಡುವ ವಲಸೆ ಕಾರ್ಮಿಕರ ಸಂಖ್ಯೆ ರೈಲು ನಿಲ್ದಾಣಗಳಲ್ಲಿ ಕಡಿಮೆ ಇದೆ.
ಲೋಕಮಾನ್ಯ ತಿಲಕ್ ಟರ್ಮಿನಸ್ (LTT) , ಕುರ್ಲಾ ನಿಲ್ದಾಣದಿಂದ ಉತ್ತರಪ್ರದೇಶ ಮತ್ತು ಬಿಹಾರಕ್ಕೆ ರೈಲುಗಳು ಸಂಚರಿಸುತ್ತಿದ್ದು ಕಳೆದ ಎರಡು ದಿನಗಳಲ್ಲಿ ಪ್ರಯಾಣಿಕರ ಸಂಖ್ಯೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಹೇಳಿರುವುದಾಗಿ ಇಂಡಿಯನ್ ಎಕ್ಸ್ಪ್ರೆಸ್ ಪತ್ರಿಕೆ ವರದಿ ಮಾಡಿದೆ. ಭಾನುವಾರ ರಾತ್ರಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕೊವಿಡ್ ನಿಯಂತ್ರಣಕ್ಕಾಗಿ ಹೊಸ ನಿರ್ಬಂಧಗಳನ್ನು ಘೋಷಿಸಿದ ಬೆನ್ನಲ್ಲೇ ಹಲವಾರು ಪ್ರಯಾಣಿಕರು ರೈಲಿನಲ್ಲಿ ಮುಂಗಡವಾಗಿ ಸೀಟು ಕಾಯ್ದಿರಿಸಿದ್ದಾರೆ.
ಭಾನುವಾರದ ನಂತರ ಮುಂಗಡ ಟಿಕೆಟ್ ಕಾಯ್ದಿರಿಸುವವರ ಸಂಖ್ಯೆಯಲ್ಲಿ ಹೆಚ್ಚಳವಾಗಲೀ, ರೈಲು ನಿಲ್ದಾಣದಲ್ಲಿ ಜನರ ಗುಂಪಾಗಲೀ ಕಂಡು ಬಂದಿಲ್ಲ ಎಂದು ಸೆಂಟ್ರಲ್ ಮತ್ತು ಪಶ್ಚಿಮ ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ. ಸಾಂಕ್ರಾಮಿಕ ಆರಂಭವಾದ ಕೂಡಲೇ ಎರಡನೇ ದರ್ಜೆ ಸೇರಿ ಮುಂಗಡ ಸೀಟು ಕಾಯ್ದಿರಿಸುವ ವ್ಯವಸ್ಥೆ ಆರಂಭಿಸಿದ್ದೆವು. ರೈಲಿನಲ್ಲಿ ಪ್ರಯಾಣಿಸಬೇಕಾದರೆ ಜನರು ಮುಂಗಡವಾಗಿ ಟಿಕೆಟ್ ಕಾಯ್ದಿರಿಸಬೇಕು ಎಂದು ಸೆಂಟ್ರಲ್ ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.