ಬೆಂಗಳೂರು, ಜೂ. 2: ಕೇರಳಕ್ಕೆ ಜೂನ್ 3ರಂದು ಮುಂಗಾರು ಪ್ರವೇಶಿಸಿದ 3 ದಿನಗಳ ನಂತರ ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಲಿದೆ. ಅರಬ್ಬಿ ಸಮುದ್ರದ ಮಧ್ಯೆ ಮೇಲ್ಮೈ ಸುಳಿಗಾಳಿ ತೀವ್ರಗೊಂಡಿರುವುದರಿಂದ ನಿನ್ನೆಯಿಂದ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನೂ ಮೂರು ದಿನ ರಾಜ್ಯಾದ್ಯಂತ ಗುಡುಗು ಸಿಡಿಲು ಸಹಿತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಜೂನ್ 4ರವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಜಾಸ್ತಿಯಾದ ಹಿನ್ನೆಲೆ ಮಳೆಯಾಗುತ್ತಿದೆ. ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಾಗೂ ಇನ್ನು ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆಗಳಿವೆ. ಈಗಾಗಲೇ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಹಲವೆಡೆ ಮಳೆಯಾಗಿದ್ದು, ನಾಗರಬಾವಿಯಲ್ಲಿ ತುಂತುರು ಮಳೆಯಾಗಿದೆ. ವಿದ್ಯಾರಣ್ಯಪುರದಲ್ಲಿ ಜೋರು ಮಳೆಯಾಗಿದೆ. ಎಲೆಕ್ಟ್ರಾನಿಕ್ ಸಿಟಿ, ಲಾಲ್ ಬಾಗ್ ಸುತ್ತಲೂ ತುಂತುರು ಮಳೆಯಾಗಿದ್ದು, ಮಾರತ್ತಹಳ್ಳಿಯ ಕೆಲ ಭಾಗದಲ್ಲಿ ತುಂತುರು ಮಳೆ ಮುಂದುವರಿದಿದೆ.
ಎಲ್ಲೆಲ್ಲಿ ಯೆಲ್ಲೋ ಅಲರ್ಟ್?:
ಉತ್ತರ ಕನ್ನಡ , ದಕ್ಷಿಣ ಕನ್ನಡ , ಉಡುಪಿ, ಬೀದರ್, ಗದಗ , ಬೆಂಗಳೂರು ನಗರ. ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ಕೊಡಗು ಕೋಲಾರ ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 4ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.
ಈ ವರ್ಷ ಮುಂಗಾರು ಮಳೆ ಕೊಂಚ ತಡವಾಗಲಿದ್ದು, ನಾಳೆ ಕೇರಳಕ್ಕೆ ಮಾನ್ಸೂನ್ ಪ್ರವೇಶಿಸಲಿದೆ. ಕರ್ನಾಟಕಕ್ಕೆ ಜೂನ್ 5 ಅಥವಾ 6ರಂದು ಮುಂಗಾರಿನ ಪ್ರವೇಶವಾಗಲಿದೆ. ಇಂದಿನಿಂದ 3 ದಿನಗಳವರೆಗೆ ಕೇರಳ ಮತ್ತು ಮಾಹೆ ಸೇರಿದಂತೆ ಹಲವು ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗಲಿದೆ. ಈಗಾಗಲೇ ಕೇರಳ, ಅಸ್ಸಾಂ, ಮೇಘಾಲಯ, ಆಂಧ್ರಪ್ರದೇಶದ ಕರಾವಳಿ ಪ್ರದೇಶ, ಅರುಣಾಚಲ ಪ್ರದೇಶದಲ್ಲಿ ಮಳೆಯಾಗುತ್ತಿದ್ದು, ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಇಂದು ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಧಾರವಾಡ, ಬೆಳಗಾವಿ, ಗದಗ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ಚಾಮರಾಜನಗರ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ, ಬೀದರ್, ಚಿಕ್ಕಮಗಳೂರಿನಲ್ಲಿ ಇಂದಿನಿಂದ ಮಳೆಯ ಅಬ್ಬರ ಹೆಚ್ಚಾಗಲಿದೆ. ನಿನ್ನೆಯೇ ಕೇರಳಕ್ಕೆ ಪ್ರವೇಶಿಸಬೇಕಿದ್ದ ಮುಂಗಾರು ಜೂನ್ 3ಕ್ಕೆ ಕೇರಳವನ್ನು ಪ್ರವೇಶಿಸಲಿದೆ. ಇದರ ಪರಿಣಾಮವಾಗಿ ಇಂದಿನಿಂದ ಜೂನ್ 4ರವರೆಗೂ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಕರ್ನಾಟಕದಲ್ಲಿ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶವಾಗಲಿದ್ದು, ಮಳೆಗಾಲ ಶುರುವಾಗಲಿದೆ ಎಂದು ಕರ್ನಾಟಕ ಪ್ರಾದೇಶಿಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ ಆಗಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಇಂದು ಕರ್ನಾಟಕ ಮಾತ್ರವಲ್ಲದೆ ಕೇರಳ, ಗುಜರಾತ್, ಮಹಾರಾಷ್ಟ್ರ, ಅರುಣಾಚಲ ಪ್ರದೇಶದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜೂನ್ 5 ಅಥವಾ 6ರಂದು ಕರ್ನಾಟಕದಲ್ಲಿ ಮುಂಗಾರು ಮಳೆಯಾಗಲಿದೆ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕೆಎಸ್ಎನ್ಡಿಎಂಸಿ ಸೈಂಟಿಫಿಕ್ ಆಫೀಸರ್ ಎಸ್.ಎಸ್.ಎಂ. ಗವಾಸ್ಕರ್, ಒಂದು ಬಾರಿ ಮುಂಗಾರು ಆರಂಭವಾದ ನಂತರ ಅದರ ಪರಿಣಾಮ ಯಾವ ರೀತಿ ಇರಬಹುದು ಎಂದು ನಾವು ಅಂದಾಜಿಸಬಹುದು. ಜೂನ್ನಿಂದ ಸೆಪ್ಟೆಂಬರ್ವರೆಗೆ ಮಳೆಯ ಆರ್ಭಟವಿರಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಈ ವರ್ಷ ಸಾಧಾರಣದಿಂದ ಧಾರಾಕಾರ ಮಳೆಯಾಗಲಿದೆ. ಜೂನ್ ಮೊದಲ ವಾರದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ.