ರಾಜ್ಯದ ಆಯ್ದ ನಗರಗಳಲ್ಲಿ ರಾತ್ರಿ ಕರ್ಫ್ಯೂ: ಕೊರೊನಾ ಓಡಿಸಲು ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷವಾದುದು: ಸಿದ್ದರಾಮಯ್ಯ ಟೀಕೆ

ಬೆಂಗಳೂರು, ಏ. 10: ರಾಜ್ಯದ ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂ ಹೇರಿರುವ ರಾಜ್ಯ ಸರ್ಕಾರದ ಕ್ರಮ, ಕೊರೊನಾ ಓಡಿಸಲು ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷವಾದುದು. ಅಲ್ಲೊಬ್ಬರು ಪಾಳೆಯಗಾರ, ಇಲ್ಲೊಬ್ಬರು ಮಾಂಡಲಿಕ, ಭಲೇ ಜೋಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ರಾತ್ರಿ ತೆರೆದಿರುವ ಹೊಟೇಲ್, ಚಿತ್ರಮಂದಿರ ಮತ್ತು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದರೆ ಸಾಲದೇ? ಬಿಜೆಪಿ ಅವರೇ,
ಕೊರೊನಾ ನಿಯಂತ್ರಣಕ್ಕೆ ಯಾವ ರೀತಿಯಲ್ಲಿಯೂ ಉಪಯೋಗವಾಗದ ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂವಿನ ನಾಟಕ ಯಾಕೆ? ಎಂದು ಪ್ರಶ್ನಿಸಿದ್ದಾರೆ.

ಕೊರೊನಾ ನಿಯಂತ್ರಿಸುವ ಪ್ರಾಮಾಣಿಕ ಇಚ್ಚೆ ರಾಜ್ಯದ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವ ಸುಧಾಕರ್ ಹೊಂದಿದ್ದರೆ,
ಮೊದಲು ಕೊರೊನಾ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕ್ರಮಕೈಗೊಳ್ಳಬೇಕು, ಕೋವಿಡ್ ಪರೀಕ್ಷೆ ಹೆಚ್ಚಿಸಬೇಕು ಮತ್ತು ಸೋಂಕಿತರಿಗೆ ತಕ್ಷಣ ಚಿಕಿತ್ಸೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಕೋವಿಡ್ ವ್ಯಾಕ್ಸಿನ್ ಪ್ರಾರಂಭಿಸಿ 80 ದಿನಗಳು ಕಳೆದರೂ ಕೇವಲ ಶೇಕಡಾ ಒಂದರಷ್ಟು ಜನಸಂಖ್ಯೆಗೆ ಮಾತ್ರ ನೀಡಲು ಸಾಧ್ಯವಾಗಿದೆ. ರಾಜ್ಯದಲ್ಲಿ ಈಗಾಗಲೇ ವ್ಯಾಕ್ಸಿನ್ ಕೊರತೆ ದೂರು ಕೇಳಿ ಬರತೊಡಗಿದೆ. ಗಿಮಿಕ್‌ಗಳನ್ನು ಬಿಟ್ಟು ಈ ಕಡೆ ಗಮನಹರಿಸಿ.

ದೇಶದ ಪ್ರಧಾನಿಯ ಅಂಧಾ ದರ್ಬಾರ್‌ನಿಂದ ಕರ್ನಾಟಕದ ಮುಖ್ಯಮಂತ್ರಿ ಸ್ಪೂರ್ತಿ ಪಡೆದರೆ, ಮುಖ್ಯಮಂತ್ರಿಗಳಿಂದ ಪ್ರೇರಣೆ ಪಡೆದು ಕೆಲವು ಜಿಲ್ಲಾಧಿಕಾರಿಗಳು ಕೊರೊನಾ ನಿಯಂತ್ರಣದ ಹೆಸರಲ್ಲಿ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳೇ,
ಸ್ವಲ್ಪ ಬುದ್ದಿ ಕಲಿಯಿರಿ ಅವರಿಗೆ ಬುದ್ದಿ ಹೇಳಿ ಎಂದು ಲೇವಡಿ ಮಾಡಿದ್ದಾರೆ.

Exit mobile version