ಬೆಂಗಳೂರು, ಮಾ. 30: ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದರೂ ರಾಜ್ಯದಲ್ಲಿ ಯಾವುದೇ ರೀತಿಯ ಲಾಕ್ಡೌನ್ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ ಸ್ಪಷ್ಟಪಡಿಸಿದ್ದಾರೆ.
ಕೊರೊನಾ 2ನೇ ಅಲೆ ಹಾಗೂ ರೂಪಾಂತರಿ ಕೊರೊನಾ ಹೆಚ್ಚಳ ಹಿನ್ನಲೆಯಲ್ಲಿ ಸೋಮವಾರ ಸಂಜೆ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಗೃಹ, ಆರೋಗ್ಯ, ಶಿಕ್ಷಣ ಸಚಿವರು ಹಾಗೂ ಇಲಾಖಾಧಿಕಾರಿಗಳ ಜೊತೆ ಮಹತ್ವದ ಸಭೆf ನಡೆಸಿದರು.
ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಲಾಕ್ಡೌನ್ ಇಲ್ಲ. ನೈಟ್ ಕರ್ಫ್ಯೂ ಸಹ ಜಾರಿಗೊಳಿಸುವುದಿಲ್ಲ. ಆದರೆ ಮಾ.30(ಮಂಗಳವಾರ) ರಿಂದ 15 ದಿನ ಯಾವುದೇ ಧಾರ್ಮಿಕ ಕಾರ್ಯಕ್ರಮ, ಜಾತ್ರೆ, ಪ್ರತಿಭಟನೆ, ಸತ್ಯಾಗ್ರಹಗಳಿಗೆ ಅವಕಾಶ ಇಲ್ಲ ಎಂದರು.
ಲಾಕ್ಡೌನ್ ಬದಲಿಗೆ ರಾಜ್ಯದಲ್ಲಿ ಕೋವಿಡ್ ನಿರ್ಬಂಧಿಸಲು ಒಂದಷ್ಟು ಕಠಿಣ ನಿಯಮಗಳು ಜಾರಿಗೆ ತರಲಾಗುತ್ತಿದೆ. ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸಲಾಗುವುದು. ಜತೆಗೆ ಅಪಾರ್ಟ್ಮೆಂಟ್ ಗಳಲ್ಲಿಜನ ಪಾರ್ಟಿ, ಜಿಮ್ ಮತ್ತು ಈಜುಕೋಳಗಳನ್ನು ನಿಷೇಧಿಲಾಗಿದೆ ಎಂದು ಸಿಎಂ ಹೇಳಿದರು.
ಇನ್ನೂ ಮದುವೆ ಹಾಗೂ ಇತರೆ ಸಮಾರಂಭಗಳಲ್ಲಿ ಹೆಚ್ಚು ಜನ ಸೇರುವಂತಿಲ್ಲ. ಭೌತಿಕ ಅಂತರ ಮತ್ತು ಮಾಸ್ಕ್ ಧರಿಸುವುದು ಕಡ್ಡಾಯ ಎಂದು ತಿಳಿಸಿರುವ ಅವರು, ಲಾಕ್ಡೌನ್, ನೈಟ್ ಕರ್ಫ್ಯೂ, ಕೊರೊನಾ ನಿಯಮಗಳ ಬಗ್ಗೆ ಯಾರೂ ಹೇಳಿಕೆ ಕೊಡಬಾರದು ಬಿ.ಎಸ್. ಯಡಿಯೂರಪ್ಪ, ಸಚಿವರು ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.