ಕಾನೂನು ಸುವ್ಯವಸ್ಥೆ ವಿಚಾರ: ರಾಜ್ಯ ಸರ್ಕಾರವ ವಿರುದ್ದ ಮುಗಿಬಿದ್ದ ವಿಪಕ್ಷಗಳು!

Bengaluru: ರಾಜ್ಯ ಕಾಂಗ್ರೆಸ್ (Congress) ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ವಿಪಕ್ಷಗಳು ಸಿದ್ದರಾಮಯ್ಯನವರ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿವೆ.

ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ (Hubli Neha Hiremath Case), ಚೆನ್ನಗಿರಿ ಪೊಲೀಸ್ ಠಾಣೆ ಧ್ವಂಸ ಪ್ರಕರಣ, ಉಡುಪಿ ಗ್ಯಾಂಗ್ ವಾರ್, ಬೆಂಗಳೂರಿನ ರೇವ್ ಪಾರ್ಟಿಗಳು ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿವೆ. ಈ ಕುರಿತು ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರು, ರಾಜ್ಯದಲ್ಲಿ ಮೇರೆ ಮೀರಿರುವ ಕ್ರಿಮಿನಲ್ ಚಟುವಟಿಕೆಗಳ ಬೆನ್ನಲೇ ನಿಷೇಧಿತ ಡ್ರಗ್ಸ್ ಮಾದರಿಯ ಮಾತ್ರೆಗಳ ಮಾರಾಟದ ದಂಧೆ ಅನೇಕ ಔಷಧ ಮಳಿಗೆಗಳಲ್ಲೇ ರಾಜಾರೋಷವಾಗಿ ನಡೆಯುತ್ತಿದ್ದು ಡ್ರಗ್ಸ್, ಗಾಂಜಾ (Drugs, Ganja) ಪದಾರ್ಥಗಳ ವಹಿವಾಟೂ ಸಹ ಎಗ್ಗಿಲ್ಲದೆ ನಡೆಯುತ್ತಿದೆ.

ಇದರ ಪರಿಣಾಮ ಇಬ್ಬರು ಅಮಾಯಕರು ಡ್ರಗ್ಸ್ ವ್ಯಸನಿಯೊಬ್ಬನಿಂದ ಕೊಲೆಗೀಡಾಗಿ ಪ್ರಾಣ ಕಳೆದು ಕೊಂಡಿದ್ದಾರೆ. ಸರ್ಕಾರದ ನಿಷ್ಕ್ರೀಯ ಗೊಂಡಿರುವ ಕಾನೂನು ಸುವ್ಯವಸ್ಥೆಯ ನೆರಳಿನಲ್ಲಿ ಬೆಳಕಿಗೆ ಬಾರದ ಅದೆಷ್ಟು ಜನರು ಡ್ರಗ್ಸ್ ಜಾಲಕ್ಕೆ ಸಿಲುಕಿ ಕ್ರಿಮಿನಲ್ ಚಟುವಟಿಕೆಗಳಲ್ಲಿ (Criminal Activities) ತೊಡಗಿಕೊಂಡಿದ್ದಾರೋ ಎಂಬ ಆತಂಕದ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಅಸಮರ್ಥತೆಯಿಂದಾಗಿ ಕಾಳಸಂತೆಕೋರರು, ಕೊಲೆಗಡುಕರ ಹಾಗೂ ಡ್ರಗ್ಸ್ ಮಾಫಿಯಾದ (Drugs Mafia) ಚಟುವಟಿಕೆಗಳು ಸ್ವೇಚ್ಛೆಯಾಗಿ ನಡೆಯುತ್ತಿದೆ. ಸಮಾಜ ಹಾಗೂ ದೇಶದ ಭವಿಷ್ಯ ಬೆಳಗಬೇಕಾದ ವಿದ್ಯಾರ್ಥಿಗಳು, ಯುವಜನರನ್ನು ದಿಕ್ಕು ತಪ್ಪಿಸುವ ವಿದ್ರೋಹಿ ಮಾಫಿಯಾ ಶಕ್ತಿಗಳು ರಾಜ್ಯದಲ್ಲಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುತ್ತಿರುವುದು ಕಂಡು ಬರುತ್ತಿದ್ದು ಈ ಸರ್ಕಾರ ಪ್ರಜೆಗಳಿಗೆ ಯಾವ ಭಾಗ್ಯ ಕರುಣಿಸುತ್ತದೋ ಇಲ್ಲವೋ ಗೊತ್ತಿಲ್ಲ ಆದರೆ ‘ರಕ್ಷಣೆಯ ಭಾಗ್ಯವನ್ನಾದರೂ ಕಲ್ಪಿಸಿ ನಾಗರಿಕ ಸಮಾಜದಲ್ಲಿ ಸುರಕ್ಷತಾ ಭಾವ ಮೂಡಿಸಲಿ’. ಆ ಮೂಲಕ ಜನರ ಶಾಪದಿಂದ ಮುಕ್ತಿಕಾಣಲಿ.

ರೇವ್ ಪಾರ್ಟಿಗಳು (Rave Party) ಹಾಗೂ ಹಾದಿ-ಬೀದಿಗಳಲ್ಲಿ ಡ್ರಗ್ಸ್ ಮಾಫಿಯಾ ಜಾಲ ಹರಡುತ್ತಿರುವುದರ ಹಾಗೂ ಕಳಪೆ ಔಷಧ ಪೂರೈಸಿ ಜನರ ಆರೋಗ್ಯದ ಜತೆ ಚೆಲ್ಲಾಟವಾಡುತ್ತಿರುವ ಜಾಲದ ವಿರುದ್ಧ ಈ ಕೂಡಲೇ ಸರ್ಕಾರ ಕಾರ್ಯಾಚರಣೆ ಆರಂಭಿಸದಿದ್ದರೆ ನಾಗರಿಕ ಸಮಾಜದ ಸುಭದ್ರತೆಗಾಗಿ ಬಿಜೆಪಿ (BJP) ಬೀದಿಗಿಳಿದು ಹೋರಾಡುವುದು ಅನಿವಾರ್ಯವಾದೀತು ಎಂದು ಎಚ್ಚರಿಸ ಬಯಸುವೆ ಎಂದಿದ್ದಾರೆ.

Exit mobile version