ಪುನೀತ್ ರಾಜ್ಕುಮಾರ್ ಅವರ ಸಂಸ್ಮರಣೆ ಪ್ರಯುಕ್ತ ಇವತ್ತು ಬೆಂಗಳೂರಿನ ಅರಮನೆ ಮೈದಾನದಲ್ಲಿ ಏರ್ಪಡಿಸಿರುವ ಪುನೀತ್ ನಮನ ಕಾರ್ಯಕ್ರಮ ದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಪುನೀತ್ ರಾಜ್ಕುಮಾರ್ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವುದಾಗಿ ತಿಳಿಸಿದ್ದಾರೆ.
‘ಪುನೀತ್ ನಮ್ಮೆಲ್ಲರಿಗೂ ಆತ್ಮೀಯ. ಅವನನ್ನು ನಾನು ಬಾಲ್ಯದಿಂದ ಬಲ್ಲೆ. ಬಾಲ್ಯದಲ್ಲಿಯೇ ಪ್ರತಿಭೆಯ ಚಿಲುಮೆ ಹೊಂದಿದ ವ್ಯಕ್ತಿ. ಬಾಲ ನಟನಾಗಿ ರಾಷ್ಟ್ರ ಪ್ರಶಸ್ತಿ ಗಳಿಸಿದ ಕರ್ನಾಟಕದ ಏಕೈಕ ಬಾಲಕ ಪುನೀತ್. ಸಣ್ಣ ವಯಸ್ಸಿನಲ್ಲೇ ಆತ ಅದ್ಭುತವಾಗಿ ನಟಿಸುತ್ತಿದ್ದ. ಅಷ್ಟು ಸಣ್ಣ ವಯಸ್ಸಿನಲ್ಲಿ ಹಾಗೆ ನಟಿಸೋದು ಸುಲಭವಲ್ಲ’ ಎಂದಿದ್ದಾರೆ ಬಸವರಾಜ ಬೊಮ್ಮಾಯಿ.
ಪುನೀತ್ ಅವರನ್ನು ಕಂಠೀರವ ಸ್ಟುಡಿಯೋದಲ್ಲಿ ಅಂತಿಮ ಸಂಸ್ಕಾರ ಮಾಡಲಾಗಿದೆ. ಅಪ್ಪು ಅವರ ಹೆಸರನ್ನು ರಸ್ತೆಗೆ, ಪಾರ್ಕ್ಗೆ ಇಡಲು ಅನೇಕ ಆಗ್ರಹ ಬಂದಿತ್ತು. ಇದೇ ಉದ್ದೇಶ ಸರ್ಕಾರದ್ದೂ ಹೌದು ಎನ್ನುವ ಮಾತನ್ನು ಸಿಎಂ ಹೇಳಿದರು. ‘ಪುನೀತ್ ರಾಜ್ಕುಮಾರ್ ಅವರ ಸಮಾಧಿ ಜಾಗದಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುತ್ತದೆ. ಇದರ ಜತೆಗೆ ಪುನೀತ್ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಘೋಷಣೆ ಮಾಡುತ್ತಿದ್ದೇನೆ’ ಎಂದರು ಅವರು.
ಪುನೀತ್ ರಾಜ್ಕುಮಾರ್ ಅಗಲಿಕೆ ದೊಡ್ಮನೆಗೆ ಹಾಗೂ ಅವರ ಅಭಿಮಾನಿಗಳಿಗೆ ನೋವು ತಂದಿದೆ. ಈಗ ಪುನೀತ್ ಹೆಸರಲ್ಲೇ ‘ಪುನೀತ ನಮನ’ ಕಾರ್ಯಕ್ರಮ ನಡೆಯುತ್ತಿದೆ. ದೊಡ್ಮನೆಯ ಎಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಹಾಗೂ ಅವರ ಕುಟುಂಬದವರು ‘ಪುನೀತ ನಮನ’ಕ್ಕೆ ಬಂದಿದ್ದಾರೆ. ಪುನೀತ್ ಪತ್ನಿ ಅಶ್ವಿನಿ ಅವರ ನೋವು ಇನ್ನೂ ಕಡಿಮೆ ಆಗಿಲ್ಲ. 20 ದಿನ ಕಳೆದರೂ ಅವರ ಕಣ್ಣೀರು ನಿಂತಿಲ್ಲ. ಇಂದಿನ ಕಾರ್ಯಕ್ರಮದಲ್ಲೂ ಅವರು ಕಣ್ಣೀರು ಹಾಕಿದರು.