ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಘಟನೆ ಹಿಂದೆ ಜೈಲಿನಿಂದ ಜಾಮೀನಿನ ಮೇಲೆ ಹೊರಗಡೆ ಬಂದಿರುವ ಭ್ರಷ್ಟಾಚಾರಿ ಮಹಾನಾಯಕನ ಕೈವಾಡ: ಬಿಜೆಪಿ ಟ್ವೀಟ್

ಬೆಂಗಳೂರು, ಮಾ. 16: ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಹಾಗೂ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಮಾಜಿ ಸಚಿವರ ರಾಸಲೀಲೆ ಸಿಡಿ ಸ್ಪೋಟ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿರುವ ಬೆನ್ನಲ್ಲೇ, ಸಿಡಿ ಹಿಂದಿರುವ ಮಹಾನ್ ನಾಯಕ ಯಾರು? ಎಂಬ ಪ್ರಶ್ನೆಗೆ ರಾಜ್ಯ ಬಿಜೆಪಿ ಪರೋಕ್ಷ ಸುಳಿವು ಕೊಟ್ಟಿದೆ.

ತಮ್ಮ ವಿರುದ್ಧದ ಸಿಡಿ ಪ್ರಕರಣದ ಹಿಂದೆ ಮಹಾನ್ ನಾಯಕನ ಕೈವಾಡವಿದೆ ಎಂದು ಸ್ವತಃ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದರು. ಮಾಜಿ ಸಚಿವರ ಈ ಹೇಳಿಕೆ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಅಲ್ಲದೇ ಆ ಮಹಾನ್ ನಾಯಕ ಯಾರು ಎಂಬ ಬಗ್ಗೆ ಅನೇಕರು ತಮ್ಮದೇ ವಿಶ್ಲೇಷಣೆ ಮಾಡಿದ್ದರು. ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಮಹಾನ್ ನಾಯಕ ಯಾರು ಎಂಬ ಪ್ರಶ್ನೆಗೆ ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಪರೋಕ್ಷ ಉತ್ತರ ನೀಡಿದೆ.

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಆ ಘಟನೆಯ ಹಿಂದೆ ಒಬ್ಬ ಜೈಲಿನಿಂದ ಜಾಮೀನಿನ ಮೇಲೆ ಹೊರಗಡೆ ಬಂದಿರುವ ಭ್ರಷ್ಟಾಚಾರಿ ಆರೋಪಿ ಮಹಾನಾಯಕನ ಕೈವಾಡ ಇದೆ ಎಂಬ ಸುದ್ದಿ ಇದೆ. ಆ ಮಹಾನ್ ನಾಯಕ ಕೂಡ ತನ್ನನ್ನು ಸಿಲುಕಿಸುವ ಕುತಂತ್ರ ನಡೆಯುತ್ತಿದೆ ಎಂದು ಹೇಳುವ ಮೂಲಕ ಹೆಗಲು ಮುಟ್ಟಿ ನೋಡಿಕೊಂಡಿದ್ದಾರೆ. ರಾಹುಲ್ ಗಾಂಧಿ ಏಕೆ ಸುಕನ್ಯಾ ದೇವಿಯ ಪರವಾಗಿ ಒಮ್ಮೆಯೂ ಧ್ವನಿ ಎತ್ತಿಲ್ಲ? ಎಂದು ಪ್ರಶ್ನಿಸಿದೆ.

Exit mobile version