ಕೊರೊನಾ ಸಂತ್ರಸ್ತರಿಗೆ ಪರಿಹಾರ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ,ಜೂ.21: ಕೋವಿಡ್ ಸೋಂಕಿನಿಂದ ಮೃತಪಟ್ಟವರ ಕುಟುಂಬಗಳಿಗೆ ₹4 ಲಕ್ಷ ಪರಿಹಾರ (ಎಕ್ಸ್‌ ಗ್ರೇಷಿಯಾ) ಕೊಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಿದ ಮನವಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಸೋಮವಾರ ತೀರ್ಪನ್ನು ಕಾಯ್ದಿರಿಸಿದೆ.
ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎಂ.ಆರ್. ಷಾ ಅವರನ್ನೊಳಗೊಂಡ ವಿಶೇಷ ರಜಾಕಾಲದ ಪೀಠ ಎರಡು ಗಂಟೆಗಳ ಕಾಲ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಹಿರಿಯ ವಕೀಲ ಎಸ್.ಬಿ.ಉಪಾಧ್ಯಾಯ ಮತ್ತು ಇತರ ವಕೀಲರು ಮಂಡಿಸಿದ ವಾದವನ್ನು ಆಲಿಸಿತು.
ಇದಕ್ಕೂ ಮೊದಲು ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲದ ಕಾರಣ, ಕೋವಿಡ್‌ ಸೋಂಕಿನಿಂದ ಮೃತಪಟ್ಟ ಕುಟುಂಬಗಳಿಗೆ ₹4 ಲಕ್ಷ ಪರಿಹಾರ ನೀಡಲು ಸಾಧ್ಯವಿಲ್ಲ‘ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿತ್ತು.
ಕೇಂದ್ರ ಗೃಹ ಸಚಿವಾಲಯ ಸಲ್ಲಿಸಿದ ಈ ಪ್ರಮಾಣ ಪತ್ರದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 12 ಅಡಿಯಲ್ಲಿ ಕೋವಿಡ್‌ ಸೋಂಕಿತರಿಗೆ ಉಚಿತ ಚಿಕಿತ್ಸೆ, ದೇಶದ ಪ್ರತಿಯೊಬ್ಬ ನಾಗರಿಕನಿಗೂ ಆಹಾರ ಭದ್ರತೆ ಒದಗಿಸುವುದು, ಆರೋಗ್ಯ ಮತ್ತು ಮೂಲಸೌಕರ್ಯ ಕ್ಷೇತ್ರದಲ್ಲಿ ಸೌಲಭ್ಯಗಳನ್ನು ಹೆಚ್ಚಿಸುವಂತಹ ‘ಸಾಮಾನ್ಯ ಕನಿಷ್ಠ ಪರಿಹಾರ‘ವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿತ್ತು.

Exit mobile version