ನವದೆಹಲಿ. ಮಾ. 25: ಕಳೆದ ನಾಲ್ಕು ತಿಂಗಳಿನಿಂದ ದೆಹಲಿಯ ಗಡಿಭಾಗದಲ್ಲಿ ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ರೈತರಿಗೆ ಬೆಂಬಲ ನೀಡಲು ನಾಳೆ (ಮಾರ್ಚ್ 26) ಭಾರತ್ ಬಂದ್ ಗೆ ಸಂಯುಕ್ತ ಕಿಸಾನ್ ಮೋರ್ಚಾ ( SKM) ಕರೆ ನೀಡಿದೆ. ಪಿಟಿಐ ಸುದ್ದಿಸಂಸ್ಥೆಯ ವರದಿ ಪ್ರಕಾರ ಮಾರ್ಚ್ 26ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎಲ್ಲ ಸೇವೆಗಳನ್ನು ಬಂದ್ ಮಾಡಲು ಎಸ್ಕೆಎಂ ಕರೆ ನೀಡಿದೆ. ಈ ಅವಧಿಯಲ್ಲಿ ದೇಶದಾದ್ಯಂತ ಎಲ್ಲ ಸಾರಿಗೆ, ರೈಲು, ಮಾರುಕಟ್ಟೆ ಮತ್ತು ಸಾರ್ವಜನಿಕ ಸ್ಥಳಗಳು ಬಂದ್ ಆಗಿರಲಿವೆ. ಅನ್ನದಾತರಿಗೆ ಗೌರವ ಸೂಚಿಸಲು ಭಾರತ್ ಬಂದ್ನ್ನು ಯಶಸ್ವಿ ಮಾಡಬೇಕು ಎಂದು ನಾನು ದೇಶದ ನಾಗರಿಕರಲ್ಲಿ ವಿನಂತಿಸುತ್ತೇನೆ ಎಂದು ರೈತ ನಾಯಕ ದರ್ಶನ್ ಪಾಲ್ ಹೇಳಿದ್ದಾರೆ.
ಕೃಷಿ ಕಾಯ್ದೆ ವಿರುದ್ಧ ನಡೆಯುವ ರೈತರ ಹೋರಾಟ ನಾಲ್ಕು ತಿಂಗಳು ಪೂರೈಸುತ್ತಿರುವ ಹೊತ್ತಿನಲ್ಲಿ ಮಾರ್ಚ್ 26ರಂದು ನಾವು ಸಂಪೂರ್ಣ ಭಾರತ್ ಬಂದ್ ಮಾಡಲಿದ್ದೇವೆ. ಬೆಳಗ್ಗಿನಿಂದ ಸಂಜೆವರೆಗೆ ಶಾಂತಿಯುತ ರೀತಿಯಲ್ಲಿ ಬಂದ್ ಆಚರಿಸಲಾಗುವುದು ಎಂದು ರೈತ ನಾಯಕ ಬೂಟಾ ಸಿಂಗ್ ಬುರ್ಜ್ ಗಿಲ್ ಹೇಳಿದ್ದರು.
ಭಾರತ್ ಬಂದ್ಗೆ ವೈಎಸ್ಆರ್ಸಿಪಿ ಬೆಂಬಲ
ಆಂಧ್ರ ಪ್ರದೇಶದ ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಪಕ್ಷ ( YSRCP) ಭಾರತ್ ಬಂದ್ ಗೆ ಬೆಂಬಲ ಸೂಚಿಸಿದೆ. ವಿಶಾಖಪಟ್ಟಣಂ ಉಕ್ಕು ಘಟಕವನ್ನು (VSP) ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕೃಷಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ವೈಎಸ್ಆರ್ ಕಾಂಗ್ರೆಸ್ ಪಕ್ಷ ಬೆಂಬಲ ಸೂಚಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಆಂಧ್ರ ಪ್ರದೇಶ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಪೆರ್ನಿ ವೆಂಕಟರಾಮಯ್ಯ ಅವರು ಉಕ್ಕು ಘಟಕವನ್ನು ಖಾಸಗೀಕರಣಗೊಳಿಸುವುದನ್ನು ರಾಜ್ಯ ಸರ್ಕಾರ ವಿರೋಧಿಸುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.