ಪ್ರವಾದಿ(Prophet) ಅವರನ್ನು ಅವಹೇಳನ ಮಾಡಲಾಗಿದೆ ಎಂದು ಶುಕ್ರವಾರ ಇಡೀ ದೇಶಾದ್ಯಂತ ಹಿಂಸಾಚಾರ(Voilence) ನಡೆದಿದೆ. ಉತ್ತರ ಪ್ರದೇಶ, ಜಾರ್ಖಂಡ್, ಮದ್ಯಪ್ರದೇಶ, ದೆಹಲಿ, ಜಮ್ಮುಕಾಶ್ಮೀರ, ಪಶ್ಚಿಮ ಬಂಗಾಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಹಿಂಸಾಚಾರ ತೀವ್ರ ಸ್ವರೂಪ ಪಡೆದಿದೆ.

ಇನ್ನು ರಾಜ್ಯದಲ್ಲಿಯೂ ಪ್ರತಿಭಟನೆ ನಡೆಸಲು ಎಸ್ಡಿಪಿಐ(SDPI) ಅನುಮತಿ ಕೋರಿದ್ದು, ಬೆಂಗಳೂರು ಪೊಲೀಸರು(Bengaluru Police) ಸದ್ಯಕ್ಕೆ ಅನುಮತಿ ನೀಡಲು ನಿರಾಕರಿಸಿದ್ದಾರೆ. ಬೆಂಗಳೂರಿನಲ್ಲಿ ದೊಡ್ಡಮಟ್ಟದಲ್ಲಿ ಪ್ರತಿಭಟನೆ ನಡೆಸಲು ಯೋಜನೆ ರೂಪಿಸಲಾಗಿದ್ದು ತೀವ್ರ ಕಟ್ಟೆಚ್ಚರ ವಹಿಸುವಂತೆ ಗುಪ್ತಚರ ಇಲಾಖೆ ವರದಿ ನೀಡಿದೆ. ಇನ್ನು ದೇಶಾದ್ಯಂತ ಹಿಂಸಾಚಾರ ತೀವ್ರಗೊಂಡಿರುವ ಹಿನ್ನಲೆಯಲ್ಲಿ ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಸೂಕ್ತ ಭದ್ರತೆ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai) ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು ನಗರದಲ್ಲಿ ಹೆಚ್ಚಿನ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು, ಶಿವಾಜಿನಗರ, ಕೆಜಿ ಹಳ್ಳಿ, ಡಿಜೆ ಹಳ್ಳಿ, ಗೋರಿಪಾಳ್ಯ, ಪಾದರಾಯನಪುರ, ಅಜಾದ್ ನಗರ, ನೀಲಸಂದ್ರ, ಬಕ್ಷಿ ಗಾರ್ಡನ್, ಕೆ.ಆರ್.ಮಾರ್ಕೆಟ್ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ. ಇನ್ನು ಸದಕ್ಕೆ ಬೆಂಗಳೂರು ನಗರದಲ್ಲಿ ಯಾವುದೇ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ ಎಂದು ಪೊಲೀಸ್ ಆಯುಕ್ತರು ಹೇಳಿದ್ದು, ದೇಶದ ಇತರ ಭಾಗದಲ್ಲಿ ನಡೆಯುತ್ತಿರುವ ಹಿಂಸಾಚಾರ ರಾಜ್ಯದಲ್ಲಿಯೂ ಭುಗಿಲೆಳುವ ಸಾಧ್ಯತೆ ಇದ್ದು, ಈ ನಿಟ್ಟಿನಲ್ಲಿ ಯಾವುದೇ ಪ್ರತಿಭಟನೆಗೆ ಅವಕಾಶ ನೀಡಲು ಸಾಧ್ಯವಿಲ್ಲ.

ಮುಂದಿನ ದಿನಗಳಲ್ಲಿ ಶಾಂತಿಯ ಪ್ರತಿಭಟನೆಗೆ ಅವಕಾಶ ನೀಡಲಾಗುವುದು. ಅಲ್ಲಿಯವರೆಗೂ ಸಾರ್ವಜನಿಕರು ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೊಲೀಸರು ಮನವಿ ಮಾಡಿದ್ದಾರೆ. ಇನ್ನು ಪ್ರತಿಭಟನೆ ಹೆಸರಿನಲ್ಲಿ ಗಲಭೆ ಸೃಷ್ಟಿಸಲು ಪ್ರಯತ್ನಿಸುವವರ ವಿರುದ್ದ ಕಠಿಣ ಕ್ರಮಗೊಳ್ಳುವಂತೆ ಸೂಚನೆ ನೀಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.