ನವದೆಹಲಿ, ಆ. 18: ಸುನಂದಾ ಪುಷ್ಕರ್ ಸಾವಿನ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರನ್ನು ಆರೋಪಮುಕ್ತಗೊಳಿಸಿ ದೆಹಲಿ ನ್ಯಾಯಾಲಯ ಬುಧವಾರ ತೀರ್ಪು ಪ್ರಕಟಿಸಿದೆ. ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ದೆಹಲಿಯ ನ್ಯಾಯಾಲಯ ತೀರ್ಪು ಪ್ರಕಟಿಸಿ ಶಶಿ ತರೂರ್ ಅವರನ್ನು ಆರೋಪಮುಕ್ತಗೊಳಿಸಿದೆ. ಈ ಮೂಲಕ ಕಳೆದ ಏಳೂವರೆ ವರ್ಷಗಳ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಕ್ಕಿದೆ.
ಏನಿದು ಪ್ರಕರಣ: ಕಾಂಗ್ರೆಸ್ ಸಂಸದ ಶಶಿ ತರೂರ್ ಅವರನ್ನು ವಿವಾಹವಾಗಿದ್ದ ಸುನಂದಾ ಪುಷ್ಕರ್ 2014ರ ಜನವರಿ 17ರಂದು ದೆಹಲಿಯ ಫೈವ್ ಸ್ಟಾರ್ ಹೊಟೇಲ್ ನ ಕೋಣೆಯಲ್ಲಿ ನಿಗೂಢವಾಗಿ ಮೃತಪಟ್ಟಿದ್ದರು. ಸುನಂದಾ ಪುಷ್ಕರ್ ಅವರ ಮೃತದೇಹ ಹೊಟೇಲ್ ರೂಂನಲ್ಲಿ ಪತ್ತೆಯಾಗಿತ್ತು. ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು.
ಸುನಂದಾ ಪುಷ್ಕರ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರಿಗೆ 2018ರ ಜುಲೈ 5 ರಂದು ಜಾಮೀನು ಮಂಜೂರಾಗಿದೆ. ತಮ್ಮ ವಿರುದ್ಧದ ಆರೋಪ ಕೈಬಿಡುವಂತೆ ಶಶಿ ತರೂರ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ಅತ್ಯಂತ ಕೃತಜ್ಞ: ತಮ್ಮನ್ನು ನಿರ್ದೋಷಿ ಎಂದು ನ್ಯಾಯಾಲಯ ತೀರ್ಪು ನೀಡುತ್ತಿದ್ದಂತೆ ಪ್ರತಿಕ್ರಿಯಿಸಿರುವ ಶಶಿ ತರೂರ್, ನ್ಯಾಯಾಲಯದ ತೀರ್ಪಿಗೆ ಅತ್ಯಂತ ಗೌರವದಿಂದ ಕೃತಜ್ಞನಾಗಿದ್ದೇನೆ. ಕಳೆದ ಏಳೂವರೆ ವರ್ಷಗಳ ಕಾಲ ಅತ್ಯಂತ ಹಿಂಸೆ ಅನುಭವಿಸಿದ್ದೇನೆ ಎಂದಿದ್ದಾರೆ.