ಹಿಂದೂ ಯುವಕನ ಹತ್ಯೆಗೆ ಬೆಚ್ಚಿಬಿದ್ದ ಮಲೆನಾಡು ; ಶಿವಮೊಗ್ಗದಲ್ಲಿ ಹೈ ಅಲರ್ಟ್!

ಶಿವಮೊಗ್ಗ ನಗರದ ಸೀಗೆಹಟ್ಟಿಯ ಯುವಕ ಹರ್ಷ ಹತ್ಯೆ ಪ್ರಕರಣ ಇದೀಗ ಮಲೆನಾಡಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಶಿವಮೊಗ್ಗ ನಗರದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಫೆ.23ರ ರಾತ್ರಿವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ನಗರದ ವ್ಯಾಪ್ತಿಯಲ್ಲಿ ಫೆ.23ರ ರಾತ್ರಿ 9 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಈ ಅವಧಿಯಲ್ಲಿ ಐದಕ್ಕಿಂತಲೂ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.


ಘಟನೆ ಹಿನ್ನೆಲೆ :


ಯುವಕರ ಗುಂಪೊಂದು ಹರ್ಷನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ. ಹೊಟ್ಟೆ, ತಲೆ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಹರ್ಷ ರಕ್ತದ ಮಡುವಿನಲ್ಲಿ ಬಿದ್ದಿದ್ದ. ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಹರ್ಷ (22) ಮೃತ ದುರ್ದೈವಿ. ಶಿವಮೊಗ್ಗ ನಗರದ ಎನ್.ಟಿ.ರಸ್ತೆಯ ಕಾಮತ್ ಪೆಟ್ರೋಲ್ ಬಂಕ್ ಸಮೀಪದ ಭಾರತೀ ಕಾಲೋನಿಯಲ್ಲಿ ಭಾನುವಾರ ರಾತ್ರಿ ಘಟನೆ ಸಂಭವಿಸಿದೆ. ಹರ್ಷ ಭಜರಂಗದಳ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ. ಆತನ ಹತ್ಯೆ ವಿಚಾರ ತಿಳಿಯುತ್ತಿದ್ದ ಹಾಗೆ ಹಿಂದೂ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ತಕ್ಷಣ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ನಗರದಾದ್ಯಂತ ಅಂಗಡಿ, ಹೊಟೇಲ್ಗಳನ್ನು ಬಂದ್ ಮಾಡಿಸಿದ್ದಾರೆ. ನಗರದಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಶೀಘ್ರದಲ್ಲಿ ಬಂಧನ :


ಹರ್ಷ ಹತ್ಯೆ ಪ್ರಕರಣ ಸಂಬಂಧ ಸುಳಿವು ಸಿಕ್ಕಿದೆ. ಸದ್ಯದಲ್ಲೆ ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ನಡು ಬೀದಿಯಲ್ಲಿ ಒಬ್ಬನ ಕೊಲೆ ಮಾಡಿರುವುದು ನೋವಿನ ಸಂಗತಿ. ಹತ್ಯೆ ಮಾಡಿದವರು ಯಾರು ಅನ್ನುವುದರ ಕುರಿತು ಸುಳಿವು ಸಿಕ್ಕಿದೆ. ಪೊಲೀಸರು ಸದ್ಯದಲ್ಲೇ ಆರೋಪಿಗಳನ್ನು ಬಂಧಿಸಲಿದ್ದಾರೆ. ಪ್ರಕರಣ ಸಂಬಂಧ ಹಿರಿಯ ಅಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸುತ್ತಿದ್ದೇನೆ. ಜನರು ಶಾಂತಿ, ಸುವ್ಯವಸ್ಥೆಗೆ ಪೊಲೀಸರೊಂದಿಗೆ ಸಹಕರಿಸಬೇಕು. ಪೊಲೀಸರು ನಿಮ್ಮೊಂದಿಗೆ ಇದ್ದಾರೆ. ಜನರು ಭಾವುಕರಾಗಬಾರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿದ್ದು, ಮೆಗ್ಗಾನ್ ಆಸ್ಪತ್ರೆಯ ಶವಗಾರಕ್ಕೆ ಭೇಟಿ ನೀಡಿದ್ದರು. ಹರ್ಷನ ಮೃತದೇಹದ ಪರಿಶೀಲನೆ ನಡೆಸಿದರು. ಬಳಿಕ ಕುಟುಂಬದವರ ಜೊತೆಗೆ ಮಾತನಾಡಿದ ಗೃಹ ಸಚಿವರು, ತಪ್ಪಿತಸ್ಥರನ್ನು ಕೂಡಲೆ ಬಂಧಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಶಿವಮೊಗ್ಗದಲ್ಲಿ ನಿಷೇಧಾಜ್ಞೆ :

5 ಜನಕ್ಕಿಂತ ಹೆಚ್ಚಿನ ಜನ ಸೇರುವುದು ನಿಷೇಧ. ಮೆರವಣಿಗೆ, ಪ್ರತಿಭಟನೆ ಸೇರಿದಂತೆ ಎಲ್ಲಾ ಬಗೆಯ ಸಭೆ, ಸಮಾರಂಭಗಳನ್ನು ನಿಷೇಧ ಮಾಡಲಾಗಿದೆ. ಶಸ್ತ್ರಗಳು, ದೊಣ್ಣೆ, ಕತ್ತಿ ಸೇರಿದಂತೆ ಯಾವುದೆ ರೀತಿಯ ಮಾರಕಾಸ್ತ್ರಗಳನ್ನು ಒಯ್ಯುವುದು, ಸ್ಫೋಟಕ ವಸ್ತುಗಳನ್ನು ಸಿಡಿಸುವುದು, ಒಯ್ಯುವುದು ನಿಷೇಧಿಸಲಾಗಿದೆ. ನಿಷೇಧಾಜ್ಞೆ ಜಾರಿಯಲ್ಲಿ ಇರುವ ಅವಧಿಯಲ್ಲಿ ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ದ್ವಿಚಕ್ರ ವಾಹನ ಸಂಚಾರ ನಿಷೇಧಿಸಲಾಗಿದೆ. ತುರ್ತು ಸಂದರ್ಭ ದ್ವಿಚಕ್ರ ವಾಹನಗಳ ಸಂಚಾರ ಮಾಡುವವರು ಪೊಲೀಸ್ ಇಲಾಖೆಯಿಂದ ಪ್ರತ್ಯೇಕ ಪಾಸ್ ಪಡೆಯಬೇಕು. ಎಲ್ಲಾ ಅಂಗಡಿಗಳ ಬಾಗಿಲನ್ನು ರಾತ್ರಿ 9 ಗಂಟೆಯೊಳಗೆ ಮುಚ್ಚಬೇಕು. ಎಲ್ಲಾ ಚಲನಚಿತ್ರ ಮಂದಿರಗಳಲ್ಲಿ ರಾತ್ರಿ 9 ಗಂಟೆ ನಂತರ ಪ್ರದರ್ಶನ ನಿಷೇಧಿಸಲಾಗಿದೆ.

Exit mobile version