RSS ಷಡ್ಯಂತ್ರದಿಂದಾಗಿ ಮತಾಂತರ ನಿಷೇಧ ಕಾಯಿದೆ – ಸಿದ್ದರಾಮಯ್ಯ

ಬೆಂಗಳೂರು ಡಿ 22 : RSS ಷಡ್ಯಂತ್ರದಿಂದಾಗಿ ಸರ್ಕಾರ ಮತಾಂತರ ನಿಷೇಧ ಮಸೂದೆಯನ್ನು ಜಾರಿಗೊಳಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯ ಸರ್ಕಾರ ತರಲು ಹೊರಟಿರುವ ಮತಾಂತರ ನಿಷೇಧ ಕಾಯಿದೆ ವ್ಯಕ್ತಿ ಸ್ವಾತಂತ್ರ್ಯ ಮತ್ತು ಧಾರ್ಮಿಕ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದೆ. ಇದು ಸಂವಿಧಾನ ವಿರೋಧಿ ಕಾನೂನು. ಇದು ಆರ್‌ಎಸ್‌ಎಸ್‌ನವರ ಅಜೆಂಡಾ. ಈ ಸರ್ಕಾರ ಸಾಧನೆ ಎಂದು ಹೇಳಿಕೊಳ್ಳಲು ಯಾವ ಕೆಲಸಗಳನ್ನು ಮಾಡಿಯೇ ಇಲ್ಲ, ಹಾಗಾಗಿ ಇಂಥದ್ದೊಂದು ವಿವಾದಾತ್ಮಕ ಕಾನೂನು ಜಾರಿ ಮಾಡಿ ಎಂದು ಆರ್‌ಎಸ್‌ಎಸ್‌ನವರೇ ಸರ್ಕಾರಕ್ಕೆ ಹೇಳಿರುತ್ತಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹರಿಹಾಯ್ದರು.

ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಸದನದಲ್ಲಿ ಮಂಡಿಸಿದ ಬಳಿಕ ಸಭಾತ್ಯಾಗ ಮಾಡಿ ಮಾಧ್ಯಮದವರ ಜೊತೆ ಮಾತನಾಡಿದ ಸಿದ್ದರಾಮಯ್ಯ, ಪರಿಷತ್ ಚುನಾವಣೆಯ ಫಲಿತಾಂಶ ಇಂಥದ್ದೊಂದು ವಿವಾದಾತ್ಮಕ ಕಾನೂನು ಜಾರಿ ಮಾಡಲು ಕಾರಣ. ನಮಗೆ 45% ಮತ ಬಿದ್ದಿದೆ, ಬಿಜೆಪಿಗೆ 41% ಮತ ಬಿದ್ದಿದೆ. ಹೋದ ಮಾನ ಉಳಿಸಿಕೊಳ್ಳಲು ಸರ್ಕಾರ ಸಂವಿಧಾನ ಬಾಹಿರ ಕಾನೂನು ಜಾರಿ ಮಾಡಲು ಹೊರಟಿದೆ. ಭಾರತದ ಸಂವಿಧಾನದ ಆಧಾರದ ಮೇಲೆ ಸರ್ಕಾರ ನಡೆಸಬೇಕು, ಪಾಕಿಸ್ತಾನದ ಸಂವಿಧಾನ ನೋಡಿಕೊಂಡಲ್ಲ. ಈಶ್ವರಪ್ಪ ಅವರಿಗೆ ನಮ್ಮ ಸಂವಿಧಾನದ ಬಗ್ಗೆ ಗೊತ್ತಿಲ್ಲ ಎಂದು ಕಾಣುತ್ತದೆ ಎಂದು ವ್ಯಂಗ್ಯವಾಡಿದರು

ಕಲಾಪದ ಇಂದಿನ ಅಜೆಂಡಾದಲ್ಲಿ ಮತಾಂತರ ನಿಷೇಧ ಕಾಯ್ದೆಯ ಪ್ರಸ್ತಾಪ ಇರಲಿಲ್ಲ. ಇಂದು ಮಧ್ಯಾಹ್ನ ಊಟದ ವಿರಾಮಕ್ಕೆ ತೆರಳುವ ಮೊದಲು ಆರ್.ಅಶೋಕ್ ಅವರು ನೆರೆ, ಅತಿವೃಷ್ಟಿ ಪರಿಹಾರ ಕಾರ್ಯದ ಉತ್ತರ ನೀಡಲು ಆರಂಭ ಮಾಡಿದ್ದರು. ಉತ್ತರ ಮುಗಿದ ಮೇಲೆ ಬೇರೆ ವಿಷಯ ಕೈಗೆತ್ತಿಕೊಳ್ಳುವುದು ನಿಯಮ. ಆದರೆ ಸರ್ಕಾರ ಹೆಚ್ಚುವರಿ ಅಜೆಂಡಾವನ್ನು ಸೇರಿಸಿ ಇದ್ದಕ್ಕಿದ್ದಂತೆ ಮತಾಂತರ ನಿಷೇಧ ಕಾಯಿದೆಯನ್ನು ಪ್ರಸ್ತಾಪ ಮಾಡಿ, ಸದನದ ಮತಕ್ಕೆ ಹಾಕಿತು. ಸರ್ಕಾರ ಸಭಾಧ್ಯಕ್ಷರ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಕದ್ದು ಮುಚ್ಚಿ ಮಸೂದೆಯನ್ನು ಮಂಡಿಸಿದೆ. ಈ ಮಸೂದೆ ಮಂಡನೆಗೆ ಅಂತಹಾ ತುರ್ತು ಏನಿತ್ತು? ನಾಳೆ ಅಥವಾ ನಾಡಿದ್ದು ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಲು ಸರ್ಕಾರದ ಬಳಿ ಸಮಯವಿತ್ತು. ಗುಜರಾತ್, ಮಧ್ಯಪ್ರದೇಶ, ಉತ್ತರ ಪ್ರದೇಶದಲ್ಲಿ ಈ ಕಾನೂನು ಜಾರಿ ಮಾಡಿದ್ದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ. ಗುಜರಾತ್ ನ್ಯಾಯಾಲಯ ಮತಾಂತರ ನಿಷೇಧ ಕಾನೂನಿಗೆ ತಡೆಯಾಜ್ಞೆ ನೀಡಿದೆ. ಇನ್ನೂ ಕೆಲವು ರಾಜ್ಯಗಳಲ್ಲಿ ಕಾಯ್ದೆ ಜಾರಿಯನ್ನು ತಡೆಹಿಡಿಯಲಾಗಿದೆ ಎಂದರು.

Exit mobile version