ಬೆಂಗಳೂರು, ಜೂ. 05: ಕೊರೋನಾ ಕಾರಣದಿಂದಾಗಿ ಈ ಬಾರಿ ದ್ವಿತೀಯ ಪಿಯು ಪರೀಕ್ಷೆಯನ್ನು ರದ್ದುಗೊಳಿಸಲಾಗಿದ್ದು, ಗ್ರೇಡಿಂಗ್ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ಫಲಿತಾಂಶ ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಇಷ್ಟೇ ಅಲ್ಲದೇ, ಪಿಯುಸಿ ಫಲಿತಾಂಶ ನೀಡಲು ಪ್ರಥಮ ಪಿಯುಸಿ ಅಂಕಗಳ ಜೊತೆಗೆ ಎಸ್ಎಸ್ಎಲ್ಸಿ ಅಂಕಗಳನ್ನು ಕೂಡ ಗಣನೆಗೆ ತೆಗೆದುಕೊಳ್ಳುವುದಾಗಿ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಪಿಯು ವಿದ್ಯಾರ್ಥಿಗ ಪರೀಕ್ಷಾ ಫಲಿತಾಂಶವು ಇನ್ನಷ್ಟು ಸಮಗ್ರವಾಗಲು ಈ ತೀರ್ಮಾನ ಕೈಗೊಂಡಿರುವುದಾಗಿ ಸಚಿವರು ಹೇಳಿದ್ದಾರೆ. ಹೆಚ್ಚು ನ್ಯಾಯಯುತವಾಗಲು ವಿದ್ಯಾರ್ಥಿಗಳ ಎಸ್.ಎಸ್.ಎಲ್.ಸಿ ಫಲಿತಾಂಶಗಳನ್ನೂ ಅವಲೋಕನ ಮಾಡಲಿದ್ದೇವೆ. ಸೂಕ್ತ ಮೌಲ್ಯವನ್ನು ಕಲ್ಪಿಸುವ ಮೂಲಕ ಫಲಿತಾಂಶ ಘೋಷಣೆ ಮಾಡುತ್ತೇವೆ ಎಂದಿದ್ದಾರೆ.
ಈ ಕುರಿತು ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶಿಕ್ಷಣ ಪರೀಕ್ಷಾ ಮಂಡಳಿಯ ವತಿಯಿಂದ ಅಂಕಿ ಅಂಶಗಳನ್ನು ಪಡೆದು ಪ್ರಥಮ ಪಿಯು ಅಂಕಗಳೊಂದಿಗೆ ಸೂಕ್ತ ರೀತಿಯಲ್ಲಿ ಹೊಂದಿಸಲಾಗುತ್ತದೆ. ಜೂನ್ ಅಂತ್ಯಕ್ಕೆ ಗ್ರೇಡಿಂಗ್ ಫಲಿತಾಂಶ ಘೋಷಣೆಯಾಗಲಿದೆ. ಈ ಬಾರಿಯ ದ್ವಿತೀಯ ಪಿಯು ಫಲಿತಾಂಶ ಘೋಷಣಾ ಪ್ರಕ್ರಿಯೆ ಯಾವ ರೀತಿ ಇರುತ್ತದೆ ಎಂಬುದನ್ನು ಸಚಿವರು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಪ್ರಥಮ ಪಿಯು ಹಾಗೂ ಎಸ್.ಎಸ್.ಎಲ್.ಸಿ ಅಂಕಗಳನ್ನು ಮಾನದಂಡ ಮಾಡಲಾಗಿದೆ. ಈಗಾಗಲೇ ದ್ವಿತೀಯ ಪಿಯು ಪರೀಕ್ಷೆಗಳನ್ನು ರದ್ದು ಪಡಿಸುವ ತೀರ್ಮಾನ ಮಾಡಿ ಆಗಿದೆ. ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಗಳ ನಡುವೆ ಸಮತೋಲನ ತರಲು ಈ ರೀತಿಯ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮೊದಲ ಪಿಯು ಅಂಕಗಳಲ್ಲದೇ ಎಸ್.ಎಸ್.ಎಲ್.ಸಿ ಫಲಿತಾಂಶವನ್ನೂ ಪರಿಗಣಿಸಿ ಅದಕ್ಕೆ ಸಮನಾದ ಸೂಕ್ತ ಮೌಲ್ಯವನ್ನು ಸೇರ್ಪಡಿಸಿ, ಗ್ರೇಡಿಂಗ್ ಫಲಿತಾಂಶವನ್ನು ನೀಡಲು ಸಹ ನಿರ್ಧಾರ ಮಾಡಿದ್ದೇವೆ ಎಂದರು.
ಅಲ್ಲದೇ ಯಾವುದೇ ವಿದ್ಯಾರ್ಥಿಯು ತನ್ನ ಫಲಿತಾಂಶದ ಬಗ್ಗೆ ತೃಪ್ತಿ ಹೊಂದದೇ ಇದ್ದಲ್ಲಿ ಸೋಂಕು ಕಡಿಮೆಯಾದ ಮೇಲೆ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದಾಗಿದೆಯೆಂದೂ ಘೋಷಿಸಿದ್ದೇವೆ. ದ್ವಿತೀಯ ಪಿಯು ಅಂಕಗಳನ್ನು ಸಿಇಟಿ ಪರೀಕ್ಷೆಗೆ ಪರಿಗಣಿಸಿ ಫಲಿತಾಂಶವನ್ನು ಘೋಷಿಸಲಾಗುತ್ತದೆ. ಈ ಬಾರಿಯ ಗ್ರೇಡಿಂಗ್ ಫಲಿತಾಂಶವು ವಿದ್ಯಾರ್ಥಿಗಳ ಪ್ರತಿಭೆಯನ್ನು ಖಚಿತವಾಗಿ ವ್ಯಕ್ತಪಡಿಸಿದರೂ, ನಿರಾಕರಿಸಿ ಇನ್ನೊಮ್ಮೆ ಪರೀಕ್ಷೆ ಬರೆಯುವ ಅವಕಾಶವನ್ನು ಕಲ್ಪಿಸಲಿದೆ ಎಂದು ಸಚಿವರು ಹೇಳಿದ್ದಾರೆ. ಇದೇ ವೇಳೆ, ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಕೇವಲ ಸಿಇಟಿ ಅಂಕವನ್ನು ಪರಿಗಣಿಸಿ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಉನ್ನತ ಶಿಕ್ಷಣ ಸಚಿವ, ಡಿಸಿಎಂ ಅಶ್ವತ್ಥನಾರಾಯಣಗೆ ಮನವಿ ಮಾಡಿದ್ದಾರೆ. ವೃತ್ತಿಪರ ಕೋರ್ಸಿಗೆ ಪ್ರವೇಶ ಕಲ್ಪಿಸುವ ಸಿ.ಇ.ಟಿ.ಪರೀಕ್ಷೆಗೆ ಪಿಯು ಫಲಿತಾಂಶ ಪರಿಗಣಿಸಿ ವೇಟೇಜ್ ನೀಡುವ ಪ್ರಕ್ರಿಯೆಯನ್ನು ಕೈಬಿಡಿ. ಕೇವಲ ಸಿ.ಇ.ಟಿ ಪರೀಕ್ಷೆಗಳ ಅಂಕಗಳನ್ನು ಮಾತ್ರ ರಾಂಕಿಂಗ್ಗೆ ಪರಿಗಣಿಸಿ ಎಂದು ವಿನಂತಿಸಿದ್ದಾರೆ. ಈ ವರ್ಷದ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೇ ಯಾವ ರೀತಿ ಗ್ರೇಡ್ ಕೊಡಬಹುದು. ಅವ್ರ ಕಲಿಕೆ ಬಗ್ಗೆ ಏನ್ ಮಾಡಬಹುದು ಎಂದು ತಿಳಿದುಕೊಂಡಿದ್ದೇವೆ. ಬೇರೆ ರಾಜ್ಯಗಳಲ್ಲಿ ಪರೀಕ್ಷೆ ರದ್ದು ಬಗ್ಗೆ ಕೇಳಿದ್ದೇವೆ. ನಮ್ಮ ರಾಜ್ಯದಲ್ಲಿ ಈ ವರ್ಷ ಪಿಯುಸಿ ಪರೀಕ್ಷೆ ರದ್ದು ಮಾಡಿದ್ದೇವೆ. ಎಲ್ಲಾ ಪಿಯುಸಿ ವಿದ್ಯಾರ್ಥಿಗಳಿಗೆ ಗ್ರೇಡ್ ಮುಖಾಂತರ ಅಂಕ ನೀಡ್ತೇವೆ ಎಂದು ಸುರೇಶ್ ಕುಮಾರ್ ನಿನ್ನೆ ಹೇಳಿದ್ದರು.