- ಕರ್ನಾಟಕದಲ್ಲಿ ಶಿಕ್ಷಕರ ಕೊರತೆಯಿಂದಾಗಿ ಸರ್ಕಾರಿ ಶಾಲೆಗಳ ಗುಣಮಟ್ಟ ಕುಸಿತ
- ಸರ್ಕಾರದ ನಿಧಾನ ಕ್ರಮದಿಂದ ಪೋಷಕರಲ್ಲಿ ಅಸಮಾಧಾನ
- ಸಾವಿರಾರು ಶಾಲೆಗಳಲ್ಲಿ ಒಂದೇ ಶಿಕ್ಷಕನಿಂದ ಬೋಧನೆ
Bengaluru: ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ ಎಂಬ ಆರೋಪಗಳು ಆಗಾಗ ಕೇಳಿ ಬರುತ್ತಿತ್ತು.
ಈ ಬಾರಿ ಅಂಕಿಅಂಶಗಳೇ ಅದಕ್ಕೆ ಸಾಕ್ಷಿಯಾಗಿವೆ. (Teacher shortage in government schools)
ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸಾವಿರಾರು ಶಿಕ್ಷಕರ ಹುದ್ದೆಗಳು ಖಾಲಿಯಾಗಿರುವುದರಿಂದ, ವಿದ್ಯಾರ್ಥಿಗಳ ಭವಿಷ್ಯ ಕತ್ತಲೆಯತ್ತ ದಾರಿ ಹಿಡಿಯುತ್ತಿದೆ.

ಮೂಲಭೂತ ಸೌಕರ್ಯಗಳ ಕೊರತೆ, ತರಗತಿ ಕೊಠಡಿಗಳ ಅಭಾವ ಮತ್ತು ಮುಖ್ಯವಾಗಿ ಖಾಯಂ ಶಿಕ್ಷಕರ ಕೊರತೆ ಶಿಕ್ಷಣದ ಗುಣಮಟ್ಟ ಕುಸಿತಕ್ಕೆ ಪ್ರಮುಖ ಕಾರಣವೆಂದು ತಜ್ಞರು ಹೇಳುತ್ತಿದ್ದಾರೆ.
ಶಿಕ್ಷಣ ಇಲಾಖೆಯ ಇತ್ತೀಚಿನ ದತ್ತಾಂಶ ಪ್ರಕಾರ, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸುಮಾರು 61,525 ಶಿಕ್ಷಕರ ಹುದ್ದೆಗಳು ಖಾಲಿ ಇವೆ.
ಈ ಭಾರಿ ಕೊರತೆಯಿಂದ ಸಾವಿರಾರು ವಿದ್ಯಾರ್ಥಿಗಳು ಪೂರ್ಣ ಪ್ರಮಾಣದ ಪಾಠಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ.
ಬದಲಿಗೆ ಸರ್ಕಾರ ಅತಿಥಿ ಶಿಕ್ಷಕರ ಮೇಲೆ ಅವಲಂಬನೆ ವಹಿಸಿದ್ದು, ಇದು ದೀರ್ಘಾವಧಿಯ ಪರಿಹಾರವಾಗದೆ ಕೇವಲ ತಾತ್ಕಾಲಿಕ ಕ್ರಮವಾಗಿ ಪರಿಣಮಿಸಿದೆ. (Teacher shortage in government schools)
ಸರ್ಕಾರಿ ಶಾಲೆಗಳ ಬಲವರ್ಧನೆಗೆ ಸರ್ಕಾರವು ಹಲವು ಘೋಷಣೆಗಳನ್ನು ನೀಡಿದರೂ, ಖಾಯಂ ಶಿಕ್ಷಕರ ನೇಮಕಾತಿಯಲ್ಲಿ ಯಾವುದೇ ಸ್ಪಷ್ಟ ಕ್ರಮ ಕಾಣಿಸುತ್ತಿಲ್ಲ.
ಇತ್ತೀಚೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ರಾಜ್ಯದಲ್ಲಿ ಶೀಘ್ರದಲ್ಲೇ 18,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಅದರಲ್ಲಿ ಸರ್ಕಾರಿ ಶಾಲೆಗಳಿಗೆ 12,000 ಮತ್ತು ಅನುದಾನಿತ ಶಾಲೆಗಳಿಗೆ 6,000 ಅತಿಥಿ ಶಿಕ್ಷಕರ ಹುದ್ದೆಗಳಿವೆ.
ಆದರೆ ಪೋಷಕರು ಮತ್ತು ವಿದ್ಯಾರ್ಥಿ ಸಂಘಟನೆಗಳು ಈ ಕ್ರಮವನ್ನು ತಾತ್ಕಾಲಿಕ ಪರಿಹಾರವೆಂದು ಹೇಳಿ ಅಸಮಾಧಾನ ವ್ಯಕ್ತಪಡಿಸುತ್ತಿವೆ.
ಅತಿಥಿ ಶಿಕ್ಷಕರ ನೇಮಕಾತಿಯ ಬದಲಾಗಿ ಖಾಯಂ ಶಿಕ್ಷಕರ ನೇಮಕಾತಿಯನ್ನೇ ಸರ್ಕಾರ ಆದ್ಯತೆಯಾಗಿ ಪರಿಗಣಿಸಬೇಕು.
ವರ್ಷದಿಂದ ವರ್ಷಕ್ಕೆ ಹುದ್ದೆಗಳ ಸಂಖ್ಯೆ ಹೆಚ್ಚುತ್ತಿದ್ದು, ಹೊಸ ನೇಮಕಾತಿಯಿಲ್ಲದೆ ಹಳೆಯ ಶಿಕ್ಷಕರು ನಿವೃತ್ತಿಯಾಗುತ್ತಿರುವುದರಿಂದ ಸಮಸ್ಯೆ ಇನ್ನಷ್ಟು ತೀವ್ರವಾಗುತ್ತಿದೆ.
ಗ್ರಾಮೀಣ ಪ್ರದೇಶಗಳ ಸ್ಥಿತಿ ಇನ್ನೂ ಗಂಭೀರವಾಗಿದೆ. ಅಂಕಿಅಂಶಗಳ ಪ್ರಕಾರ 5,539 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ.
ಒಂದೇ ಶಿಕ್ಷಕ ಎಲ್ಲ ವಿಷಯಗಳನ್ನು ಬೋಧಿಸುವ ಪರಿಸ್ಥಿತಿ ಉಂಟಾಗಿದೆ. ಇದರಿಂದ ಮಕ್ಕಳಲ್ಲಿ ಮೂಲಭೂತ ಕಲಿಕೆ ಹಾಗೂ ಬೋಧನಾ ಗುಣಮಟ್ಟದ ಮೇಲೆ ನೇರ ಪರಿಣಾಮ ಬೀರುತ್ತಿದೆ.
ಅನೇಕ ಶಾಲೆಗಳು ವಿದ್ಯಾರ್ಥಿಗಳ ಕೊರತೆಯಿಂದಲೇ ಮುಚ್ಚುವ ಹಂತಕ್ಕೆ ತಲುಪಿದ್ದರೂ, ಉಳಿದ ಶಾಲೆಗಳಲ್ಲಿ ಬೋಧಕ ಸಿಬ್ಬಂದಿ ಕೊರತೆಯಿಂದ ಪಾಠಗಳು ಸರಿಯಾಗಿ ನಡೆಯುತ್ತಿಲ್ಲ.
ಈ ಹಿನ್ನೆಲೆಯಲ್ಲಿ, ಖಾಸಗಿ ಶಾಲೆಗಳೊಂದಿಗೆ ಸ್ಪರ್ಧೆ ಮಾಡಲು ಸರ್ಕಾರಿ ಶಾಲೆಗಳು ಹೋರಾಡುತ್ತಿದ್ದರೂ ಫಲಿತಾಂಶಗಳು ನಿರಾಶಾಜನಕವಾಗಿವೆ.
ಒಂದೆಡೆ ರಾಜ್ಯ ಸರ್ಕಾರವು ಬಜೆಟ್ನಲ್ಲಿ ಸಾವಿರಾರು ಕೋಟಿ ರೂಪಾಯಿಗಳನ್ನು ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡುತ್ತಿದ್ದರೂ, ಮತ್ತೊಂದೆಡೆ ಶಿಕ್ಷಕರ ಕೊರತೆಯನ್ನು ನಿವಾರಿಸಲು ನಿರ್ಲಕ್ಷ್ಯ ತೋರಿಸುತ್ತಿರುವುದನ್ನು ವಿರೋಧ ಪಕ್ಷಗಳು ಮತ್ತು ಶಿಕ್ಷಣ ತಜ್ಞರು ಟೀಕಿಸುತ್ತಿದ್ದಾರೆ.
“ಶಿಕ್ಷಣಕ್ಕಾಗಿ ಹಣ ಮೀಸಲಿಡುವುದೇ ಸಾಕಾಗದು. ಅದರ ಸರಿಯಾದ ಬಳಕೆ ಮತ್ತು ಶಿಕ್ಷಕರ ನೇಮಕಾತಿ ಮೂಲಕ ಮಾತ್ರ ಸರ್ಕಾರಿ ಶಾಲೆಗಳ ಸ್ಥಿತಿ ಸುಧಾರಿಸುತ್ತದೆ” ಎಂದು ತಜ್ಞರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.