ಕೇಂದ್ರದ ಬಜೆಟ್ ಅರ್ಥ ವ್ಯವಸ್ಥೆ ಪುನಶ್ಚೇತನದೊಂದಿಗೆ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ವೇಗವರ್ಧಕವಾಗಿದೆ: ಬಿ. ಎಸ್‌. ಯಡಿಯೂರಪ್ಪ

ಬೆಂಗಳೂರು, ಫೆ. 01: 2021-22ನೇ ಸಾಲಿನ ಕೇಂದ್ರ ಬಜೆಟ್ ಅರ್ಥ ವ್ಯವಸ್ಥೆಯ ಪುನಶ್ಚೇತನದೊಂದಿಗೆ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ವೇಗವರ್ಧಕವಾಗಿ ಕಾರ್ಯನಿರ್ವಹಿಸುವ ಸಾಮರ್ಥ್ಯ ಪ್ರದರ್ಶಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಣ್ಣಿಸಿದ್ದಾರೆ.

ವಿತ್ತ ಸಚಿವೆ ಶ್ರೀಮತಿ ನಿರ್ಮಲ ಸೀತಾರಾಮನ್ ಅವರು ಇಂದು ಮಂಡಿಸಿದ ಬಜೆಟ್2021 ಸವಾಲಿನ ವರ್ಷದಲ್ಲಿ ದೇಶದ ಅರ್ಥವ್ಯವಸ್ಥೆಯ ಪುನಶ್ಚೇತನಕ್ಕೆ ಸಂಜೀವಿನಿಯಾಗಿದೆ. ಕೋವಿಡ್-19 ಬಿಕ್ಕಟ್ಟಿನಿಂದ ಸ್ಥಗಿತಗೊಂಡ ಅರ್ಥವ್ಯವಸ್ಥೆ ಮತ್ತೆ ಪುಟಿದೇಳಲು ನರೇಂದ್ರ ಮೋದಿ ಸರ್ಕಾರದ ಈ ಬಜೆಟ್ ವೇಗವರ್ಧಕವಾಗಲಿದೆ. ಸಾಂಕ್ರಾಮಿಕದ ಸಂಕಷ್ಟಗಳ ನಡುವೆ ಇದು ಉತ್ತಮ ಬಜೆಟ್ ಆಗಿದೆ.

ಕೋವಿಡ್ ಲಸಿಕೆ ಅಭಿಯಾನಕ್ಕೆ 35,000 ಕೋಟಿ ರೂ, ಕೃಷಿ ಬಲವರ್ಧನೆ, ಅನ್ನದಾತ ರೈತರ ಅಭಿವೃದ್ಧಿಗೆ ಪ್ರಾಮುಖ್ಯತೆ, ಕೌಶಲ್ಯ ಹಾಗೂ ಮೂಲಸೌಕರ್ಯಾಭಿವೃದ್ಧಿ, ಕೈಗಾರಿಕಾ ಬೆಳವಣಿಗೆಗೆ ಬಜೆಟ್‍ನಲ್ಲಿ ವಿಶೇಷಗಮನ ನೀಡಲಾಗಿರುವುದು ಸ್ವಾಗತಾರ್ಹ. ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನಂತೆ 2022ರೊಳಗೆ ರೈತರ ಆದಾಯ ದ್ವಿಗುಣಗೊಳಿಸಲು ಭೂಮಿಕೆ ಒದಗಿಸಲಾಗಿದೆ.

ಸ್ವಾವಲಂಬಿ ಭಾರತ ನಿರ್ಮಾಣದ ನಿಟ್ಟಿನಲ್ಲಿ ಬಜೆಟ್ ನಲ್ಲಿ 13 ವಲಯಗಳಲ್ಲಿ ವಿಶೇಷ ಕಾರ್ಯಕ್ರಮ ರೂಪಿಸಿರುವುದು, ಸ್ವಚ್ಛ ಅಭಿಯಾನಕ್ಕೆ 1.41 ಲಕ್ಷ ಕೋಟಿ ರೂ. ಅನುದಾನ ಒದಗಿಸಿರುವುದನ್ನು ಸ್ವಾಗತಿಸುತ್ತೇನೆ. ಪ್ರಸಕ್ತ ಬಜೆಟ್ ಅರ್ಥವ್ಯವಸ್ಥೆಯ ಪುನಶ್ಚೇತನದೊಂದಿಗೆ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಶಕ್ತಿ ತುಂಬುವ ಸಾಮರ್ಥ್ಯ ಪ್ರದರ್ಶಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Exit mobile version