ಬೆಂಗಳೂರು, ಏ. 06: ರಾಜ್ಯದಲ್ಲಿ ಕೊರೊನಾ ಸಂಕಷ್ಟ ಎದುರಾಗಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ, ಇದೀಗ ಸರ್ಕಾರಿ ನೌಕರರಿಗೂ “ವರ್ಕ್ ಫ್ರಂ ಹೋಮ್”ಗೆ ಆದೇಶಿಸಿದೆ.
ಪ್ರಮುಖವಾಗಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಹಾಗೂ ನಿಗಮ ಮಂಡಳಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ದೃಷ್ಟಿ ದೋಷ ಹಾಗೂ ಇತರೆ ವಿಕಲ ಚೇತನ ಹೊಂದಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳು ಮನೆಯಿಂದಲೇ ಕಾರ್ಯ ನಿರ್ವಹಿಸಲು ಸರ್ಕಾರ ಆದೇಶಿಸಿದೆ.
ರಾಜ್ಯದಲ್ಲಿ ಕೊರೊನಾ ಅಲೆಯ ಆತಂಕ ಮುಂದುವರಿದಿದ್ದು, ಕೇಂದ್ರ ಸರ್ಕಾರದ ಆರೋಗ್ಯ ಮಂತ್ರಾಲಯದ ಮಾರ್ಗಸೂಚಿ ಅನ್ವಯ ಹೊರಡಿಸಲಾಗಿದ್ದ ಸುತ್ತೋಲೆಯನ್ನು ರಾಜ್ಯ ಸರ್ಕಾರ ಮುಂದುವರಿಸಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ದೃಷ್ಟಿದೋಷ ಹಾಗೂ ಇತರೆ ವಿಕಲಚೇತನ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಚೇರಿಗೆ ಹಾಜರಾಗಿ ಕರ್ತವ್ಯ ನಿರ್ವಹಿಸುವುದು ಕಷ್ಟಸಾಧ್ಯ.
ಆದ್ದರಿಂದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ಸ್ವಾಯತ್ತ ಸಂಸ್ಥೆ, ನಿಗಮ ಮಂಡಳಿ ಕಚೇರಿಗಳಲ್ಲಿ ಕೆಲಸ ಮಾಡುತ್ತಿರುವ ದೃಷ್ಟಿ ದೋಷ ಹಾಗೂ ವಿಕಲಚೇತನ ಅಧಿಕಾರಿಗಳು ಮತ್ತು ಸಿಬ್ಬಂದಿ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶ ಹೊರಡಿಸಿದ್ದಾರೆ.