- ಮೊಂಥಾ ಚಂಡಮಾರುತದ ಅಬ್ಬರ
- ರೈಲು ಓಡಾಟ ರದ್ದು, ವಿಮಾನ ಹಾರಾಟದಲ್ಲೂ ವ್ಯತ್ಯಯ
- ಆಂಧ್ರ – ಒಡಿಶಾದಲ್ಲಿ ಭಾರೀ ಮಳೆಯ ಮುನ್ನೆಚ್ಚರಿಕೆ

Andrapradesh: ಬಂಗಾಳಕೊಲ್ಲಿ (Bangalakolli) ಯಲ್ಲಿನ ವಾಯುಭಾರ ಕುಸಿತವು ಈಗ ಮೊಂಥಾ (montha cyclone) ಎಂಬ ಹೆಸರಿನ ಚಂಡಮಾರುತದ ರೂಪ ಪಡೆದುಕೊಂಡಿದ್ದು, ಆಂಧ್ರಪ್ರದೇಶ (Andrapradesh) ಮತ್ತು ಒಡಿಶಾ (Odisha) ಕರಾವಳಿಯತ್ತ ವೇಗವಾಗಿ ಚಲಿಸುತ್ತಿದೆ. ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ಈ ಚಂಡಮಾರುತವು ಇಂದು ಸಂಜೆ ವೇಳೆಗೆ ಮಚಲಿಪಟ್ನಂ ಮತ್ತು ಕಳಿಂಗಪಟ್ನಂ ನಡುವಿನ ಪ್ರದೇಶದಲ್ಲಿ ಭೂಕುಸಿತ ಉಂಟುಮಾಡುವ ಸಾಧ್ಯತೆಯಿದೆ.
ಕಾಕಿನಾಡ ಮತ್ತು ಶ್ರೀಕಾಕುಳಂ ನಡುವಿನ ಸಮುದ್ರ ತೀರ ಪ್ರದೇಶಗಳಲ್ಲಿ ಸಮುದ್ರ ಅಲೆಗಳು 2 ರಿಂದ 4.7 ಮೀಟರ್ ಎತ್ತರದಲ್ಲಿ ಏರಬಹುದು ಎಂದು ಎಚ್ಚರಿಕೆ ನೀಡಲಾಗಿದೆ.ಗಂಟೆಗೆ 110 ಕಿ.ಮೀ ವೇಗದಲ್ಲಿ ಚಲಿಸುತ್ತಿರುವ ಈ ಚಂಡಮಾರುತವು ಪೂರ್ವ ಕರಾವಳಿಯತ್ತ (East coast) ಧಾವಿಸುತ್ತಿದ್ದು, ಹಲವು ಪ್ರದೇಶಗಳಲ್ಲಿ ಗಾಳಿ-ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಳ್ಳುವ ಭೀತಿ ವ್ಯಕ್ತವಾಗಿದೆ.
ಚಂಡಮಾರುತದ ಪ್ರಭಾವಕ್ಕೆ ಒಳಗಾಗುವ ಸಾಧ್ಯತೆ ಇರುವ ಆಂಧ್ರಪ್ರದೇಶ, ಒಡಿಶಾ, ಪುದುಚೇರಿ, ತಮಿಳುನಾಡು (Tamilnadu) ಮತ್ತು ಛತ್ತೀಸ್ಗಢ ರಾಜ್ಯಗಳಲ್ಲಿ ಕೇಂದ್ರ ಸರ್ಕಾರವು ಎನ್ಡಿಆರ್ಎಫ್ನ 22 ತಂಡಗಳನ್ನು ನಿಯೋಜಿಸಿದೆ. ಸ್ಥಳೀಯ ಆಡಳಿತಗಳು ಈಗಾಗಲೇ ಕರಾವಳಿ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯ ಆರಂಭಿಸಿವೆ. ಅಧಿಕಾರಿಗಳ ಪ್ರಕಾರ, ಕೇವಲ ಆಂಧ್ರದಲ್ಲೇ 1,400ಕ್ಕೂ ಹೆಚ್ಚು ಹಳ್ಳಿಗಳು ಮತ್ತು 40ಕ್ಕೂ ಹೆಚ್ಚು ಪಟ್ಟಣಗಳಲ್ಲಿ ಚಂಡಮಾರುತದ ಪರಿಣಾಮ ಬೀರುವ ಸಾಧ್ಯತೆ ಇದೆ.
ಮೊಂಥಾ ಚಂಡಮಾರುತದ ಪರಿಣಾಮವಾಗಿ ಆಂಧ್ರಪ್ರದೇಶದ ರೈಲು ಸಂಚಾರ ತೀವ್ರವಾಗಿ ಬಾಧಿತವಾಗಿದೆ. ವಿಜಯವಾಡ ವಿಭಾಗದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 50 ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಲಾಗಿದೆ. ರಾಜಮಂಡ್ರಿ, ಕಾಕಿನಾಡ, ಗುಂಟೂರು, ವಿಶಾಖಪಟ್ಟಣಂ(vishakapattanam) ಮತ್ತು ಮಚಲಿಪಟ್ನಂನಿಂದ ಹೊರಡುವ ಅನೇಕ ರೈಲುಗಳನ್ನೂ ಸ್ಥಗಿತಗೊಳಿಸಲಾಗಿದೆ. ಇಂಡಿಗೋ ಏರ್ಲೈನ್ಸ್ನ ವಿಮಾನ ಸಂಚಾರವೂ ವ್ಯತ್ಯಯಗೊಂಡಿದ್ದು, ವಿಜಯವಾಡ ಹಾಗೂ ವಿಶಾಖಪಟ್ಟಣಂ ಮಾರ್ಗದ ವಿಮಾನಗಳು ಮುಂದಿನ 24 ಗಂಟೆಗಳ ಕಾಲ ಸ್ಥಗಿತಗೊಂಡಿವೆ. ಪ್ರಯಾಣಿಕರಿಗೆ ಸುರಕ್ಷತಾ ಕ್ರಮದ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ಆಂಧ್ರ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ತುರ್ತು ಸಭೆ ನಡೆಸಿ, ಕರಾವಳಿ ಪ್ರದೇಶಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಆದೇಶಿಸಿದ್ದಾರೆ. ಈಗಾಗಲೇ ಸುಮಾರು 50,000ಕ್ಕೂ ಹೆಚ್ಚು ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ತಮಿಳುನಾಡಿನ ಕಡಲೂರು ಹಾಗೂ ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ನಿರಂತರ ಮಳೆಯ ಹಿನ್ನೆಲೆಯಲ್ಲಿ ಶಾಲಾ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ತಮಿಳುನಾಡು, ಪುದುಚೇರಿ ಮತ್ತು ಆಂಧ್ರ ಕರಾವಳಿಯಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ. ಇನ್ನು ಮೊಂಥಾ ಚಂಡಮಾರುತದ ಪರಿಣಾಮ ಕರ್ನಾಟಕದಲ್ಲೂ ಗೋಚರಿಸುತ್ತಿದೆ. ಹವಾಮಾನ ಇಲಾಖೆ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದೆ.
ಜೊತೆಗೆ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹೊನ್ನಾವರ, ಕಾರವಾರ, ಅಂಕೋಲಾ, ಗೋಕರ್ಣ, ಪುತ್ತೂರು, ವಿಜಯಪುರ ಮುಂತಾದ ಪ್ರದೇಶಗಳಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗಾಳಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.