ವಲಸಿಗರನ್ನ ಪಕ್ಷಕ್ಕೆ ಸೇರಿಸಿಕೊಳ್ಳೋ ಪ್ರಶ್ನೆಯೇ ಇಲ್ಲ: ವಿಪಕ್ಷ‌ ನಾಯಕ ಸಿದ್ದರಾಮಯ್ಯ ಪುನರುಚ್ಚಾರ

ಬೆಂಗಳೂರು, ಜು. 23: ವಲಸಿಗ ಸಚಿವರನ್ನ ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು ಇನ್ನು ವಲಸಿಗ ಸಚಿವರನ್ನು ಮತ್ತೆ ಕಾಂಗ್ರೆಸ್ ಗೆ ಸೇರಿಸಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಅವರು ನಮ್ಮ‌ ಪಕ್ಷಕ್ಕೆ ಬರುತ್ತಾರೋ, ಇಲ್ಲವೋ ಎನ್ನುವುದು ನನಗಂತೂ ಗೊತ್ತಿಲ್ಲ. ಪಕ್ಷಕ್ಕೆ ಅವರನ್ನು ವಾಪಾಸ್ ಸೇರಿಸಿಕೊಳ್ಳುವುದಿಲ್ಲ ಎಂದು ಈ ಹಿಂದೆ ಸದನದಲ್ಲೇ ಹೇಳಿದ್ದೇನೆ. ಅದಕ್ಕೆ ನಾನು ಈಗಲೂ ಬದ್ಧನಿದ್ದೇನೆ ಎಂದು ಪುನರುಚ್ಚರಿಸಿದ್ದಾರೆ.

ಇದೇ ವೇಳೆ ರಾಜ್ಯದ ಪ್ರವಾಹ ಪರಿಸ್ಥಿತಿ ಕುರಿತು ಪ್ರತಿಕ್ರಿಯಿಸಿದ ಅವರು, 2019ರಲ್ಲಿ ಬಂದ ಪ್ರವಾಹದಿಂದ ಸಂತ್ರಸ್ತರಾದವರಿಗೇ ಇನ್ನೂ ಬಿಜೆಪಿ ಸರ್ಕಾರ ಪರಿಹಾರ ಕೊಟ್ಟಿಲ್ಲ. ಈಗ ಎಲ್ಲಾ ಕಡೆ ಮಳೆ ಬಂದು ಜನ, ಜಾನುವಾರಗಳ ಪ್ರಾಣ ಹಾನಿಯಾಗಿದೆ, ಮನೆಗಳು ಬಿದ್ದಿವೆ. ಇಂತಹ ಸಮಯದಲ್ಲಿ ಸರ್ಕಾರ ಯುದ್ದೋಪಾದಿಯಲ್ಲಿ ಕೆಲಸ ಮಾಡೋ ಬದಲು ಸಿಎಂ ಬದಲಾವಣೆ ಮಾಡುವ ಕೆಲಸದಲ್ಲಿ ಮುಳುಗಿದೆ ಎಂದು ಟೀಕಿಸಿದ್ದಾರೆ.

Exit mobile version