ನವದೆಹಲಿ, ಮೇ. 03: ‘ದೇಶದಲ್ಲಿ ಕೊರೊನಾ 2ನೇ ಅಲೆಯ ಸೋಂಕು ವೇಗವಾಗಿ ಹರಡುತ್ತಿದೆ. ಹೆಚ್ಚು ಜನರು ಸೇರುವ, ಸೂಪರ್ ಸ್ಪ್ರೆಡರ್ ಕಾರ್ಯಕ್ರಮಗಳನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಬೇಕು. ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಲಾಕ್ಡೌನ್ ಹೇರುವ ಬಗ್ಗೆಯೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆಲೋಚಿಸಬೇಕು’ ಎಂದು ಸುಪ್ರೀಂಕೋರ್ಟ್ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸಲಹೆ ನೀಡಿದೆ.
ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ಭಾನುವಾರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹಲವು ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಿದೆ. ‘ಲಾಕ್ಡೌನ್ನ ಸಾಮಾಜಿಕ ಮತ್ತು ಆರ್ಥಿಕ ಪರಿಣಾಮಗಳ ಬಗ್ಗೆ ನಮಗೆ ಅರಿವಿದೆ. ಆದರಲ್ಲಿಯೂ ಬಡವರ ಮೇಲೆ ಲಾಕ್ಡೌನ್ನ ಪರಿಣಾಮಗಳು ತೀವ್ರತರವಾಗಿರುತ್ತವೆ ಎಂಬುದು ನಮಗೆ ತಿಳಿದಿದೆ. ಲಾಕ್ಡೌನ್ ಹೇರಿದರೆ ಈ ಸಮುದಾಯದ ಹಿತ ಕಾಪಾಡಲು ಅಗತ್ಯ ಕ್ರಮಗಳನ್ನೂ ಸರ್ಕಾರಗಳು ತೆಗೆದುಕೊಳ್ಳಬೇಕು’. ‘ಸ್ಥಳೀಯ ಗುರುತಿನ ಪುರಾವೆಗಳು ಇಲ್ಲ ಎನ್ನುವ ಕಾರಣಕ್ಕೆ ಯಾವುದೇ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳ ಆಡಳಿತ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಬಾರದು. ಆಸ್ಪತ್ರೆಗಳಿಗೆ ರೋಗಿಗಳನ್ನು ದಾಖಲು ಮಾಡಿಕೊಳ್ಳುವ ಕುರಿತು ಕೇಂದ್ರ ಸರ್ಕಾರವು ಇನ್ನು 2 ವಾರಗಳ ಒಳಗೆ ರಾಷ್ಟ್ರೀಯ ನೀತಿಯೊಂದನ್ನು ರೂಪಿಸಬೇಕು. ಇದನ್ನು ಎಲ್ಲ ರಾಜ್ಯ ಸರ್ಕಾರಗಳೂ ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.
‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಕಷ್ಟು ಪ್ರಮಾಣದಲ್ಲಿ ಆಕ್ಸಿಜನ್ ದಾಸ್ತಾನು ಇರಿಸಿಕೊಳ್ಳಬೇಕು. ಮುಂದಿನ ನಾಲ್ಕು ದಿನಗಳ ಒಳಗೆ ತುರ್ತು ದಾಸ್ತಾನು ಸಿದ್ಧವಾಗಬೇಕು. ಇದನ್ನು ಪ್ರತಿದಿನವೂ ಪರಿಶೀಲಿಸಬೇಕು. ಯಾವುದೇ ರಾಜ್ಯಕ್ಕೆ ಆಕ್ಸಿಜನ್ ಸರಬರಾಜಿನಲ್ಲಿ ತೊಂದರೆಯಾಗಬಾರದು’ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯ ಬಗ್ಗೆ ಸುಪ್ರೀಂಕೋರ್ಟ್ ಸ್ವಯಂಪ್ರೇರಿತವಾಗಿ ಅರ್ಜಿ ದಾಖಲಿಸಿಕೊಂಡು ವಿಚಾರಣೆ ನಡೆಸಿತು. ಈ ವೇಳೆ ಆಕ್ಸಿಜನ್, ಜೀವರಕ್ಷಕ ಔಷಧಿಗಳು ಮತ್ತು ಲಸಿಕೆಗಳ ಪೂರೈಕೆ ಬಗ್ಗೆ ಸುಪ್ರೀಂಕೋರ್ಟ್ ಪರಾಮರ್ಶೆ ನಡೆಸಿತು.