ನವದೆಹಲಿ,ಮಾ,26: ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಲು ಆಗ್ರಹಿಸಿ ಬೆಳಗ್ಗೆ 6ರಿಂದ ಸಂಜೆ 6 ಗಂಟೆಯವರೆಗೆ ಭಾರತ್ ಬಂದ್ಗೆ ಸಂಯುಕ್ತ ಕಿಸಾನ್ ಮೋರ್ಚಾದಿಂದ ಕರೆ ನೀಡಿದೆ. 119 ದಿನಗಳಿಂದ ದೆಹಲಿಯಲ್ಲಿ ಹೋರಾಟ ನಡೆಸ್ತಿರುವ ರೈತರ ಹೋರಾಟಕ್ಕೆ ಇಂದು 4 ತಿಂಗಳು ತುಂಬಿದ ಹಿನ್ನೆಲೆಯಲ್ಲಿ ಭಾರತ್ ಬಂದ್ಗೆ ರೈತ ಸಂಘಟನೆಗಳು ಕರೆ ನೀಡಿವೆ. ಈ ಹೋರಾಟಕ್ಕೆ ರಾಜ್ಯ ರೈತ ಸಂಘಗಳು, ಸಂಯುಕ್ತ ಹೋರಾಟ-ಕರ್ನಾಟಕ ಸಮಿತಿ ಸೇರಿದಂತೆ ಕೆಲ ಸಂಘಟನೆಗಳು ಬೆಂಬಲ ನೀಡಿವೆ.
ಆಂಧ್ರ ಪ್ರದೇಶದಲ್ಲಿ ಭಾರತ್ ಬಂದ್ಗೆ ವ್ಯಾಪಕ ಬೆಂಬಲ ಸಿಕ್ಕಿದೆ. ಆಂಧ್ರ ಪ್ರದೇಶದ ಗುಂಟೂರು, ವಿಜಯನಗರಂ, ಕರ್ನೂಲು, ಶ್ರೀಕಾಕುಳಂ, ವಿಶಾಖಪಟ್ಟಣಂ ಸೇರಿ ಅನೇಕ ಜಿಲ್ಲೆಗಳಲ್ಲಿ ಬೆಂಬಲ ವ್ಯಕ್ತವಾಗಿದೆ. ಬಸ್ ನಿಲ್ದಾಣಗಳಿಗೆ ಬಸ್ಗಳು ಸೀಮಿತವಾಗಿದ್ದು ರಸ್ತೆಗಳು ಬಿಕೋ ಎನ್ನುತ್ತಿವೆ. ಕೆಲ ಸಂಘಟನೆಗಳು ಪ್ರತಿಭಟನೆ ಸಹ ನಡೆಸುತ್ತಿವೆ.
ಭಾರತ್ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋ ಬಸ್ತ್ ಕೈಗೊಳ್ಳಲಾಗಿದೆ. 3 ಎಸಿಪಿ, 8 ಇನ್ಸ್ಪೆಕ್ಟರ್, 20 ಸಬ್ ಇನ್ಸ್ಪೆಕ್ಟರ್, ಸೇರಿದಂತೆ 350 ಪೊಲೀಸರಿಂದ ಕಣ್ಗಾವಲು ಇಡಲಾಗಿದೆ. ಜೊತೆಗೆ 4 ಕೆಎಸ್ಆರ್ಪಿ ತುಕಡಿ ಜೊತೆಗೆ 20 ಬಿಎಂಟಿಸಿ ಬಸ್ ನಿಯೋಜನೆ ಮಾಡಲಾಗಿದೆ. 10 ಗಂಟೆಗೆ ಟೌನ್ ಹಾಲ್ ಮುಂದೆ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗುತ್ತದೆ. ನಂತರ ಮೈಸೂರು ಬ್ಯಾಂಕ್ ಸರ್ಕಲ್ ವರೆಗೆ ಅನ್ನದಾತರು ಶವಯಾತ್ರೆ ನಡೆಸಲಿದ್ದಾರೆ.