- ಅತಿಕ್ರಮಣ ತೆರವು, ರಸ್ತೆ ಗುಂಡಿ ಮುಚ್ಚುವಿಕೆ ಮತ್ತು ಮೂಲಸೌಕರ್ಯ ಸುಧಾರಣೆಗಾಗಿ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ
- ಕಳಪೆ ಗುಣಮಟ್ಟದ ಕಾಮಗಾರಿ ನಡೆಸಿರುವ ಗುತ್ತಿಗೆದಾರರಿಗೆ ಎಚ್ಚರಿಕೆ
- ಪ್ರತಿ ಶುಕ್ರವಾರ ಫೋನ್-ಇನ್ ಕಾರ್ಯಕ್ರಮ; ದೂರುಗಳಿಗೆ ತಕ್ಷಣದ ಪ್ರತಿಕ್ರಿಯೆ ಭರವಸೆ (Warning to contractors who have carried out poor quality work)
Bengaluru: ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್(D.K. Shivakumar) ಅವರ ಕಠಿಣ ಎಚ್ಚರಿಕೆ ಬಳಿಕ,
ನಗರದ ವಿವಿಧ ಭಾಗಗಳಲ್ಲಿ 5 ಮಹಾನಗರ ಪಾಲಿಕೆಗಳ ಆಯುಕ್ತರು ತಕ್ಷಣದ ಪರಿಶೀಲನೆ ಕೈಗೊಂಡಿದ್ದಾರೆ. ರಸ್ತೆ ಗುಂಡಿಗಳನ್ನು ಶೀಘ್ರ ಮುಚ್ಚುವುದು,
ಅತಿಕ್ರಮಣ ತೆರವುಗೊಳಿಸುವುದು ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿರುವ ಮೂಲಭೂತ ಸೌಕರ್ಯ ಸಮಸ್ಯೆಗಳ ಪರಿಹಾರದ ಕುರಿತು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ.
ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆ ಆಯುಕ್ತ ಕೆ.ಎನ್. ರಮೇಶ್(K.N. Ramesh) ಅವರು ಬನಶಂಕರಿ ದೇವಸ್ಥಾನ ಹಾಗೂ ಸಮೀಪದ ಸಾರಕ್ಕಿ ಮಾರುಕಟ್ಟೆಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು.
ದೇವಸ್ಥಾನ ಮತ್ತು ಮಾರುಕಟ್ಟೆಯ ನಡುವೆ ಉಂಟಾಗಿರುವ ಬ್ಲಾಕ್ ಸ್ಪಾಟ್ ಹಾಗೂ ಪಾದಚಾರಿ ಮಾರ್ಗದ ಮೇಲೆ ವ್ಯಾಪಿಸಿರುವ ಅತಿಕ್ರಮಣಗಳನ್ನು ತಕ್ಷಣ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.
ನಾಗರಿಕರ ಸುಗಮ ಸಂಚಾರ ಮತ್ತು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲು ಆದೇಶಿಸಲಾಗಿದೆ.
ಇನ್ನು ಬೆಂಗಳೂರು ಪೂರ್ವ ಮಹಾನಗರ ಪಾಲಿಕೆ ಆಯುಕ್ತ ಡಿ.ಎಸ್. ರಮೇಶ್ ಅವರು ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಹಾಗೂ ಬೆಸ್ಕಾಂ, ಕೆಪಿಟಿಸಿಎಲ್, ಬಿಡಬ್ಲ್ಯೂಎಸ್ಎಸ್ಬಿ, ಗೈಲ್,

ರೈಲ್ವೆ ಮತ್ತು ಪೊಲೀಸ್ ಇಲಾಖೆಯ ಪ್ರತಿನಿಧಿಗಳೊಂದಿಗೆ ಸಮನ್ವಯ ಸಭೆ ನಡೆಸಿದರು. ಮೂಲಭೂತ ಸೌಕರ್ಯಗಳ ಕೊರತೆಯಿಂದ ರಾಷ್ಟ್ರೀಯ ಮಟ್ಟದಲ್ಲಿ ನಾಚಿಕೆಗೀಡಾಗುತ್ತಿರುವುದರ
ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಮುಂದಿನ 15 ದಿನಗಳಲ್ಲಿ ಎಲ್ಲಾ ಬಾಕಿ ಇರುವ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಾರ್ವಜನಿಕರ ತೊಂದರೆ ನಿವಾರಣೆಗಾಗಿ ಅಧಿಕಾರಿಗಳು ಸಂಪೂರ್ಣ ಜವಾಬ್ದಾರಿತನದಿಂದ ನಡೆದುಕೊಳ್ಳಬೇಕೆಂದು ಎಚ್ಚರಿಸಿದರು. ಪಶ್ಚಿಮ ಮಹಾನಗರ ಪಾಲಿಕೆ ಆಯುಕ್ತ ಡಾ. ರಾಜೇಂದ್ರ ಕೆ.ವಿ.(Dr. Rajendra K.V)
ಅವರು ಗೋವಿಂದರಾಜನಗರ(Govindarajanagar) ವಿಭಾಗದ ಮೂಡಲಪಾಳ್ಯ ವಾರ್ಡ್ನ ವಿವಿಧ ರಸ್ತೆ ಮತ್ತು ಸಾರ್ವಜನಿಕ ಸ್ಥಳಗಳನ್ನು ಪರಿಶೀಲಿಸಿದರು.
ಅಲ್ಲಿನ ಕಾಮಗಾರಿಗಳ ಗುಣಮಟ್ಟ ಹಾಗೂ ಪ್ರಗತಿ ಕುರಿತು ಗುತ್ತಿಗೆದಾರರಿಗೆ ಸ್ಪಷ್ಟ ನಿರ್ದೇಶನಗಳನ್ನು ನೀಡಿದರು. ನಾಗರಿಕರ ಮೂಲಭೂತ ಸೌಕರ್ಯ ಸುಧಾರಣೆಗೆ ಪಾಲಿಕೆಯು ಬದ್ಧವಾಗಿದೆ ಎಂಬ ಸಂದೇಶವನ್ನು ನೀಡಿದ್ದಾರೆ.
ಉತ್ತರ ಮಹಾನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರು ನಾಗವಾರದಿಂದ ಥಣಿಸಂದ್ರ-ಬಳ್ಳಾರಿ ಮುಖ್ಯರಸ್ತೆಯವರೆಗೆ 9.7 ಕಿ.ಮೀ ರಸ್ತೆ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು.
ಇದೇ ವೇಳೆ, ರೇವಾ ವೃತ್ತದಿಂದ ಎನ್ಎಚ್-7 (ಬಾಗಲೂರು ಕ್ರಾಸ್) ವರೆಗೆ 2.5 ಕಿ.ಮೀ ಹಾಗೂ ಕೋಗಿಲು ಗ್ರಾಮದಿಂದ ಅಗ್ರಹಾರ ಸಂಪಿಗೆಹಳ್ಳಿ ಮೂಲಕ MCECHS ಲೇಔಟ್ ವರೆಗೆ 3.5 ಕಿ.ಮೀ ವ್ಯಾಪ್ತಿಯ
ಕಾಮಗಾರಿಗಳನ್ನೂ ತಪಾಸಣೆ ನಡೆಸಿದರು. ಸಾರ್ವಜನಿಕರಿಗೆ ಯಾವುದೇ ಅಸೌಕರ್ಯ ಉಂಟಾಗದಂತೆ ರಸ್ತೆ ಕಾಮಗಾರಿಗಳನ್ನು ತುರ್ತು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕೇಂದ್ರ ಮಹಾನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಅವರು ಗುತ್ತಿಗೆದಾರರು ಮತ್ತು ಅಧಿಕಾರಿಗಳನ್ನು ಸಭೆಗೆ ಕರೆಯಿಸಿ, ಸಂಚಾರಯೋಗ್ಯ ರಸ್ತೆಗಳನ್ನು ಒದಗಿಸಲು ವಿಫಲವಾದರೆ
ಗಂಭೀರ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು. ಸಾರ್ವಜನಿಕ ಹಣವನ್ನು ವ್ಯರ್ಥ ಮಾಡದೆ ಗುಣಮಟ್ಟದ ಕೆಲಸ ಒದಗಿಸಲು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.
ಉತ್ತರ ಪಾಲಿಕೆ ಆಯುಕ್ತ ಸುನೀಲ್ ಕುಮಾರ್ ಅವರು ಪ್ರತೀ ಶುಕ್ರವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ಫೋನ್-ಇನ್ ಕಾರ್ಯಕ್ರಮ ನಡೆಸುವುದಾಗಿ ಘೋಷಿಸಿದ್ದಾರೆ.
ಸೆಪ್ಟೆಂಬರ್ 26 ರಿಂದ ಆರಂಭಗೊಳ್ಳಲಿರುವ ಈ ಕಾರ್ಯಕ್ರಮದಲ್ಲಿ ನಾಗರಿಕರು ನೇರವಾಗಿ ಕರೆಮಾಡಿ ತಮ್ಮ ದೂರುಗಳನ್ನು ದಾಖಲಿಸಬಹುದು. ಸಂಪರ್ಕಕ್ಕಾಗಿ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆಗಳು:
9480685705
080-22975936
080-23636671
ಇದನ್ನು ಓದಿ : ರಸ್ತೆ ಸರಿ ಮಾಡಿ ಇಲ್ಲವಾದರೆ ಕಂಪನಿಗಳ ಸ್ಥಳಾಂತರ ಮಾಡುತ್ತೇವೆ : ಬೆಂಗಳೂರಿನ ರಸ್ತೆಗುಂಡಿಗಳ ಬಗ್ಗೆ ಧ್ವನಿ ಎತ್ತಿದ ಐಟಿ ದಿಗ್ಗಜರು
ಪ್ರತಿ ದೂರುವನ್ನು ಸಂಬಂಧಿತ ಅಧಿಕಾರಿಗಳಿಗೆ ತಕ್ಷಣ ಕಳುಹಿಸಲಾಗುವುದು. ಸಿಬ್ಬಂದಿಯ ಕಾರ್ಯಕ್ಷಮತೆಯನ್ನು ಅಳೆಯಲು ಈ ವ್ಯವಸ್ಥೆ ನೆರವಾಗಲಿದೆ. (Warning to contractors who have carried out poor quality work)