ಯಡಿಯೂರಪ್ಪ ಅವರಿಂದಾಗಿ ತಪ್ಪಿದ ಮುಖ್ಯಮಂತ್ರಿ ಸ್ಥಾನ: ಮಾಜಿ ಸಿಎಂ ವಿರುದ್ಧ ಯತ್ನಾಳ್ ಆರೋಪ

ಬೆಂಗಳೂರು, ಜು. 30: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮತ್ತೊಮ್ಮೆ ಮಾಜಿ ಸಿಎಂ ವಿರುದ್ಧ ಕಿಡಿಕಾರಿದ್ದು, ಯಡಿಯೂರಪ್ಪ ಅವರಿಂದಾಗಿ ತಮಗೆ ಮುಖ್ಯಮಂತ್ರಿ ಸ್ಥಾನ ತಪ್ಪಿದೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್. ಯಡಿಯೂರಪ್ಪ ತಮ್ಮ ಪ್ರಾಣ ಹೋದರೂ ಪರವಾಗಿಲ್ಲ ಯತ್ನಾಳ್‌ರನ್ನು ಸಿಎಂ ಮಾಡಬಾರದು ಎಂಬ ಷರತ್ತನ್ನು ಹಾಕಿದ್ದರು. ಇದರ ಪರಿಣಾಮ ನಾನು ಸಿಎಂ ಆಗಲಿಲ್ಲ ಎಂದಿದ್ದಾರೆ. ಅಲ್ಲದೇ ಬಿಜೆಪಿ ಹೈಕಮಾಂಡ್ ಕೂಡ ಯಡಿಯೂರಪ್ಪ ಹೇಳಿದವರನ್ನೇ ಮುಖ್ಯಮಂತ್ರಿ ಮಾಡಿದ್ದಾರೆ. ಆದ್ರೆ ಮುಂದೆ ಯಡಿಯೂರಪ್ಪ ಹೇಳಿದ್ದೇ ಎಲ್ಲವೂ ಆಗೋದಿಲ್ಲ ಎಂದು ಕಿಡಿಕಾರಿದ್ದಾರೆ.

ಇದೇ ಸಚಿವ ಸ್ಥಾನದ ನಿರೀಕ್ಷೆ ಬಗ್ಗೆ ಮಾತನಾಡಿದ ಅವರು, ಮಂತ್ರಿಗಿರಿಗಾಗಿ ದೆಹಲಿಗೆ ಹೋಗಿ ಲಾಬಿ ಮಾಡುವ ಅವಶ್ಯಕತೆ ಇಲ್ಲ ಎಂದಿರುವ ಅವರು ಸಚಿವ ಸಂಪುಟದಲ್ಲಿ ವಿಜಯಪುರ ಜಿಲ್ಲೆಯನ್ನು ಕಡೆಗಣಿಸಿದ್ರೆ ಮುಂದಿನ ದಿನಗಳಲ್ಲಿ ಗಂಭೀರ ಪರಿಣಾಮ ಆಗುತ್ತದೆ ಎಂದು ಎಚ್ಚರಿಸಿದ್ದಾರೆ.

Exit mobile version